ಕರ್ನಾಟಕ

karnataka

By ETV Bharat Karnataka Team

Published : Sep 19, 2023, 4:25 PM IST

ETV Bharat / state

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಕುರುಬೂರು ಶಾಂತಕುಮಾರ್

ತಮಿಳುನಾಡಿನ ಕೆಆರ್​ಎಸ್​ನಿಂದ ನೀರು ಹರಿಸುವುದನ್ನು ಖಂಡಿಸಿ ರೈತ ಮುಖಂಡ ಕುರುಬೂರು ಶಾಂತಕುಮಾರ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

farmer-leader-kurubur-shanthakumar-slams-govt-on-kaveri-water-issue
ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಕುರುಬೂರು ಶಾಂತಕುಮಾರ್

ರೈತ ಮುಖಂಡ ಕುರುಬೂರು ಶಾಂತಕುಮಾರ್​

ಮೈಸೂರು: ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರ, ಚುನಾವಣೆಗೋಸ್ಕರ ತಮಿಳುನಾಡಿನ ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಆ ಮೂಲಕ ರಾಜ್ಯದ ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ನಗರದ ಪಿಡಬ್ಲ್ಯೂಡಿ ಗೆಸ್ಟ್ ಹೌಸ್ ನಲ್ಲಿ ಇಂದು ರೈತ ಸಂಘದವರು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್, ಸಿಎಂ ಅವರ ಬೇಜವಾಬ್ದಾರಿ ನಿರ್ಧಾರವನ್ನು ಖಂಡಿಸುತ್ತೇವೆ. ಕೂಡಲೇ ಜಲ ಸಂಪನ್ಮೂಲ ಸಚಿವ ಸ್ಥಾನದಿಂದ ಡಿ ಕೆ ಶಿವಕುಮಾರ್ ಅವರನ್ನು ಕೈ ಬಿಡಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದರು.

ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ಹೇಳಿತ್ತು. ಆದರೆ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ರೈತರ ಹಿತವನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ರಾಜಕೀಯ ದೊಂಬರಾಟ ಆಡುತ್ತಿದೆ. ರೈತರ ಮರಣ ಶಾಸನವನ್ನು ಬರೆಯುತ್ತಿದ್ದು, ಇದೊಂದು ನೀತಿಗೆಟ್ಟ ಸರ್ಕಾರ. ಮುಂದಿನ ದಿನಗಳಲ್ಲಿ ರೈತರು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಇಂತಹ ಬೇಜವಾಬ್ದಾರಿ ನಿರ್ಧಾರವನ್ನು ತೆಗೆದುಕೊಂಡಿರುವುದನ್ನು ನಾವು ಖಂಡಿಸುತ್ತೇವೆ. ಇದರ ಜೊತೆಗೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೂಡಲೇ ಜಲ ಸಂಪನ್ಮೂಲ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಶಾಂತಕುಮಾರ್ ಆಗ್ರಹಿಸಿದರು.

ರಾಜ್ಯ ಸರ್ಕಾರ ಜನರಿಗೆ ಗ್ಯಾರಂಟಿ ಕೊಡುತ್ತೇವೆ ಎಂದು ಹೇಳುತ್ತಿದೆ. ಈಗ ಹೊಸ ಗ್ಯಾರಂಟಿಯನ್ನು ಸರ್ಕಾರ ಸೃಷ್ಟಿ ಮಾಡಿದೆ. ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿ ಇದೀಗ ನೀರು ಬಿಟ್ಟು ರೈತರಿಗೆ ಆತ್ಮಹತ್ಯೆ ಗ್ಯಾರಂಟಿಯನ್ನು ನೀಡುತ್ತಿದೆ. ಕಾವೇರಿ ವಿಚಾರದಲ್ಲಿ ಸರ್ಕಾರದ ನಡವಳಿಕೆ ಆ ರೀತಿ ಇದೆ ಎಂದು ಕುರುಬೂರು ಟೀಕಿಸಿದರು.

ಬಸ್ ತಡೆದು ಪ್ರತಿಭಟನೆ: ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರೈತ ಮುಖಂಡರುಗಳು ಹಾಗೂ ಕಾರ್ಯಕರ್ತರು ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಕೆಲವು ಬಸ್​ಗಳನ್ನು ತಡೆದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಇಂದು ಕೆಆರ್​ಎಸ್​ನಿಂದ ರಾಜ್ಯ ಸರ್ಕಾರವು ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​ ನೀರನ್ನು ಹರಿಸಿದೆ.

ಇದನ್ನೂ ಓದಿ :ಕೆಆರ್​ಎಸ್‌ನಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸಿದ ಸರ್ಕಾರ: ವಿಡಿಯೋ

ABOUT THE AUTHOR

...view details