ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದಾಖಲಾಗಿದ್ದ ಡಿನೋಟಿಫಿಕೇಶನ್ ಮತ್ತು ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್ನ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಹಾಗೆಯೇ ಪ್ರಕರಣವನ್ನು ಕೈಬಿಡುವಂತೆ ನಿರ್ದೇಶಿಸಿದೆ.
ಅಕ್ರಮ ಭೂ ಒತ್ತುವರಿ, ಅಧಿಕಾರ ದುರ್ಬಳಕೆ ಆರೋಪದಡಿ ಸಿದ್ದರಾಮಯ್ಯ ಅವರ ವಿರುದ್ಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಿದ್ದರಾಮಯ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ, ಈ ಆದೇಶ ಮಾಡಿದೆ.
ಪ್ರಕರಣದ ಹಿನ್ನೆಲೆ : 1988ರಲ್ಲಿ ಆಗಿನ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿ, ವಿಜಯನಗರ 2 ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಹಿನಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 535 ಎಕರೆ ಭೂಮಿ ವಶಪಡಿಸಿಕೊಂಡಿತ್ತು. ಹತ್ತು ವರ್ಷಗಳ ಬಳಿಕ ಬಡಾವಣೆ ರಚಿಸಿ ನಿವೇಶನ ಹಂಚಿಕೆಯಾದ ನಂತರ, ಸಿದ್ದರಾಮಯ್ಯ ಅವರ ಆಪ್ತ ಪಾಪಣ್ಣ (ಆಗಿನ ಹಿನಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ) ತಮ್ಮ ಸಂಬಂಧಿಕರಿಗೆ ಸೇರಿದ 30 ಗುಂಟೆ ಜಮೀನಿನನ್ನು ಕೈ ಬಿಡುವಂತೆ ಮುಡಾಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿ ಮುಡಾ ಭೂಮಿಯನ್ನು ಡಿನೋಟಿಫೈ ಮಾಡಿತ್ತು.
1996 ರಲ್ಲಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದ ಜಮೀನಿನಲ್ಲಿ 10 ಗುಂಟೆ ನಿವೇಶನ ಖರೀದಿಸಿ ಮನೆ ಕಟ್ಟಿದ್ದರು. ಕೆಲ ವರ್ಷಗಳ ಬಳಿಕ ಬೇರೆಯವರಿಗೆ ಮಾರಾಟ ಮಾಡಿದ್ದರು. ಹೀಗೆ ಭೂಮಿ ಖರೀದಿಸಲು ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಗಂಗರಾಜು ಎಂಬುವರು, ಸಿದ್ದರಾಮಯ್ಯ ಹಾಗೂ ಅಂದಿನ ಮುಡಾ ಅಧ್ಯಕ್ಷ ಸೇರಿದಂತೆ ಹಲವರ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದರು.
ನ್ಯಾಯಾಲಯದ ಸೂಚನೆ ಮೇರೆಗೆ ಲಕ್ಷ್ಮಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, 2018ರ ನವೆಂಬರ್ 3ರಂದು ಬಿ-ರಿಪೋರ್ಟ್ ಸಲ್ಲಿಸಿದ್ದರು. ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಗಂಗರಾಜು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ, ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಿತ್ತು.