ಕರ್ನಾಟಕ

karnataka

By

Published : Sep 4, 2022, 7:10 AM IST

Updated : Sep 4, 2022, 7:29 AM IST

ETV Bharat / state

ಅದ್ಧೂರಿ ದಸರಾಗೆ ಪ್ರಾಯೋಜಕತ್ವ ವಹಿಸುವ ಮೂಲಕ ಕೈಜೋಡಿಸಿ: ಮೈಸೂರು ಡಿಸಿ ಮನವಿ

ದಸರಾ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್​ಗಳು ಹಾಗೂ ಇತರೆ ಸಂಸ್ಥೆಗಳ ಪ್ರಮುಖರ ಸಭೆ ನಡೆಯಿತು.

DC Meeting
ಜಿಲ್ಲಾಧಿಕಾರಿ ಸಭೆ

ಮೈಸೂರು: ಕೋವಿಡ್ ಅಲೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದ್ದು ಸರಳ ದಸರಾವನ್ನು ಮತ್ತೆ ವಿಜೃಂಭಣೆಯಿಂದ ನಡೆಸುವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ಈ ಬಾರಿಯ ದಸರಾವನ್ನು ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ವಿವಿಧ ಕಾರ್ಯಕ್ರಮಗಳ ಪ್ರಾಯೋಜಕತ್ವ ವಹಿಸುವ ಮೂಲಕ ನಾಡಹಬ್ಬದಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದ್ದಾರೆ.

ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿರುವ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನವರಾತ್ರಿಯ ದಿನಗಳಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಸಂಘ ಸಂಸ್ಥೆಗಳು, ಕೈಗಾರಿಕೆಗಳು, ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕ್​ಗಳು ಹಾಗೂ ಪ್ರಾಯೋಜಕತ್ವ ವಹಿಸಲು ಆಸಕ್ತಿ ಇರುವ ಇತರೆ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು ಎಲ್ಲಾ ಚಟುವಟಿಕೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಹಲವಾರು ಕೈಗಾರಿಕೆಗಳು, ಎನ್.ಜಿ.ಒ ಹಾಗೂ ಖಾಸಗಿ ಕಂಪನಿಗಳು ಸಾಮಾಜಿಕ ಕಳಕಳಿಯಿಂದ ಹಲವಾರು ರೀತಿಯಲ್ಲಿ ಸಹಾಯ ನೀಡುವುದರ ಮೂಲಕ ಉತ್ತಮವಾಗಿ ಸ್ಪಂದಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಮಾತನಾಡಿ, ಈ ಬಾರಿಯ ದಸರಾದಲ್ಲಿ ನಡೆಯುವ ಯುವ ದಸರಾ ಹಾಗೂ ಯುವ ಸಂಭ್ರಮದ ಕಾರ್ಯಕ್ರಮದಲ್ಲಿ ಬಾಲಿವುಡ್ ನೈಟ್ ಹಾಗೂ ಸ್ಯಾಂಡಲ್‌ವುಡ್ ನೈಟ್ ಎಂಬ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಸಂಗೀತಗಾರರನ್ನು ಅಥವಾ ನಟರನ್ನು ಕರೆಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಮಾತನಾಡಿ, ಈ ಬಾರಿಯ ದಸರಾದಲ್ಲಿ ಸ್ಪಾನ್ಸರ್ಸ್​ ಗುರುತಿಸುವುದರ ಜೊತೆಗೆ ಅವರ ಕಂಪನಿಗಳ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕವಾಗಿ ಪರಿಚಯಿಸಲು ಅನುಕೂಲವಾಗುತ್ತದೆ. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿಯೂ ಪ್ರಾಯೋಜಕರುಗಳ ಹೆಸರನ್ನು ಹಾಕಿಕೊಳ್ಳುವುದರ ಜೊತೆಗೆ ನೀಡುವ ಪ್ರಶಸ್ತಿಗಳಲ್ಲೂ ಹೆಸರನ್ನು ಹಾಕಿಸಿಕೊಳ್ಳಬಹುದು. ಇದರಿಂದ ಕಂಪನಿಗಳ ಹೆಸರು ಜನಪ್ರಿಯವಾಗಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ದಸರಾ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳು ನಡೆದರೆ ಅಂತಹ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಮಾಡಿದರೆ ಅಧಿಕೃತವಾಗಿ ಪ್ರಾಯೋಜಕರು ಎಂದು ಗುರುತಿಸಲಾಗುತ್ತದೆ. ಈ ಸಂಬಂಧ 16 ಉಪಸಮಿತಿಗಳನ್ನು ರಚಿಸಲಾಗಿದೆ. ಉಪಸಮಿತಿಗಳ ವ್ಯಾಪ್ತಿಯಲ್ಲಿ ಪ್ರತಿದಿನ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಸಭೆಯಲ್ಲಿಯೇ ಚಲನಚಿತ್ರೋತ್ಸವಕ್ಕೆ ಸಂಬಂಧಿಸಿದಂತೆ ಡಿಆರ್ಸಿ ಚಿತ್ರಮಂದಿರದಲ್ಲಿ ಒಂದು ಪರದೆಯನ್ನು ಉಚಿತವಾಗಿ ನೀಡಲು ಚಿತ್ರಮಂದಿರದ ಮಾಲೀಕರು ತಿಳಿಸಿದರು. ಜೊತೆಗೆ ಪ್ರಮುಖ ಜನಪ್ರಿಯ ಕಂಪನಿಗಳಾದ ಕೊಕೊಕೊಲಾ, ಇಸ್ಕಾನ್, ಮುತ್ತೂಟ್ ಫೈನಾನ್ಸ್, ಎಸ್.ಬಿ.ಐ ಸೇರಿದಂತೆ ಅನೇಕ ಕಂಪನಿಗಳು ಪ್ರಾಯೋಜಕತ್ವ ವಹಿಸಲು ಮುಂದಾದವು.

ಇದನ್ನೂ ಓದಿ:ಮೈಸೂರು ದಸರಾ 2022: 50.5 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

Last Updated : Sep 4, 2022, 7:29 AM IST

ABOUT THE AUTHOR

...view details