ಮೈಸೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಮೈಸೂರು ಜಿಲ್ಲೆಯನ್ನು ಲಾಕ್ ಡೌನ್ ಮಾಡಿ: ಸಿಎಂಗೆ ಪತ್ರ ಬರೆದ ಶಾಸಕ ಸಾ.ರಾ. ಮಹೇಶ್ - Sa Ra Mahesh letter to CM BSY
ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆಯನ್ನು ಕೂಡ ಕೆಲ ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಸಾ.ರಾ. ಮಹೇಶ್ ಪತ್ರ ಬರೆದಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 1091 ಪ್ರಕರಣಗಳು ವರದಿಯಾಗಿದ್ದು, 41 ಮಂದಿ ಮೃತಪಟ್ಟಿದ್ದಾರೆ. ನಗರದ ಕೆಲವೊಂದು ಭಾಗದಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ವರದಿಯಾಗಿದ್ದು, ಆ ಭಾಗದ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ಓಡಾಡುವುದರಿಂದ ಸೋಂಕು ಗ್ರಾಮೀಣ ಭಾಗಗಳಿಗೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲೆಯನ್ನು ಕೆಲ ದಿನಗಳ ಕಾಲ ಲಾಕ್ ಡೌನ್ ಮಾಡಿ ಎಂದು ಸಾ.ರಾ. ಮಹೇಶ್ ಅವರು ಸಿಎಂ ಬಿಎಸ್ವೈಗೆ ಮನವಿ ಮಾಡಿದ್ದಾರೆ.
ಈ ಹಿಂದೆ ಸಂಪೂರ್ಣ ಸೋಂಕು ಮುಕ್ತವಾಗಿದ್ದ ಮೈಸೂರು ಜಿಲ್ಲೆಯಲ್ಲಿ ಈಗ ಮತ್ತೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.