ಕ್ವಾರಂಟೈನ್ ನಿಯಮ ಉಲ್ಲಂಘನೆ: ಇಬ್ಬರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು
ಕ್ವಾರಂಟೈನ ಆದೇಶ ಉಲ್ಲಂಘಿಸಿದ ಇಬ್ಬರ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.
ರಾಯಚೂರು:ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕ್ವಾರಂಟೈನ್ ಆದೇಶ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಸೂರ್ಯನಾರಾಯಣಸ್ವಾಮಿ ಎಂಬುವರನ್ನು ತಾಲೂಕಿನ ಚಿತ್ತಾಪುರ ಪ್ರೌಢ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದೇ ರೀತಿ ತಿಪ್ಪಣ್ಣ ವಡ್ಡರ್ ಎಂಬುವರನ್ನು ಗುಡದನಾಳದಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗಿತ್ತು.
ಆದರೆ ಇಬ್ಬರೂ ಶಂಕಿತರು ಕ್ವಾರಂಟೈನ್ ಆದೇಶ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡುತ್ತಿರುವುದಾಗಿ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆಡ್ ಕಾನ್ಸ್ಟೆಬಲ್ ನಾಗರಾಜ ನೀಡಿದ ದೂರಿನ ಮೇಲೆ ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಸಿಪಿಐ ಯಶವಂತ ಬಿಸನಳ್ಳಿ ತಿಳಿಸಿದ್ದಾರೆ.