ರಾಮನಗರ:ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವವಾದದ್ದು, ಪೌರಕಾರ್ಮಿಕರಿಗೆ ವರ್ಷಕ್ಕೆ 2 ಬಾರಿ ಮಾಸ್ಟರ್ ಹೆಲ್ತ್ ಚೆಕ್ಅಪ್ ಮಾಡಿಸುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಮ್ಯಾನ್ಹೋಲ್ನಲ್ಲಿ ಕೆಲಸ ಕೈಗೊಂಡ ಸಂದರ್ಭದಲ್ಲಿ 3 ಜನ ಮೃತ ಪಟ್ಟಿದ್ದು, ಇದು ನೋವಿನ ಸಂಗತಿ. ಇದು ಜಿಲ್ಲೆಯಲ್ಲಿ ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. ಕಾರ್ಮಿಕ ಕಾಯ್ದೆ ಅನ್ವಯ ಕಾರ್ಮಿಕ ಇಲಾಖೆಯು ಗುತ್ತಿಗೆ ಆಧಾರದ ಮೇಲೆ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೆ ಪಾವತಿ ಮಾಡುವ ಪರಿಷ್ಕೃತ ವೇತನದ ಬಗ್ಗೆ ಮೇಲ್ವಿಚಾರಣೆ ಮಾಡಿದರು.
ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ವೇತನದಲ್ಲಿ ಇ.ಎಸ್.ಐ ಮತ್ತು ಪಿಎಫ್ ಮೊತ್ತವನ್ನು ಕಡಿತಗೊಳಿಸಿವುದರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಫಾಯಿ ಕರ್ಮಚಾರಿಗಳ ವೈಯಕ್ತಿಕ ಖಾತೆಗೆ ವೇತನ ಜಮೆ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಬೇಕಿರುವ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು ಹಾಗೂ ಅವುಗಳನ್ನು ಬಳಸುವಂತೆ ಅವರಲ್ಲಿ ಜಾಗೃತಿ ಮೂಡಿಸಿ, ಅಧಿಕಾರಿಗಳು ಪೌರಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಉಪಯೋಗಿಸುತ್ತಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಎಂದರು.