ಕರ್ನಾಟಕ

karnataka

ETV Bharat / state

ಆಸೆ, ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಹೆಚ್​ ಡಿ ಕುಮಾರಸ್ವಾಮಿ

ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಿ ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

By ETV Bharat Karnataka Team

Published : Sep 20, 2023, 7:29 PM IST

Updated : Sep 20, 2023, 8:20 PM IST

former-cm-hd-kumaraswamy-reaction-on-state-government
ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಹೆಚ್​ ಡಿ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

ರಾಮನಗರ:ಜನರಿಗೆ ಆಸೆ, ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದರು.

ಚನ್ನಪಟ್ಟಣದಲ್ಲಿಂದು ಮಾತನಾಡಿದ ಅವರು, ಈ ಸರ್ಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್​ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೋಪನ್​ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 224 ಅಭ್ಯರ್ಥಿಗಳನ್ನು ಚುನಾವಣ ಕಣದಿಂದ ಡಿಬಾರ್ ಮಾಡಬೇಕು ಎಂದು ಹೆಚ್​ಡಿಕೆ ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆಯೇ. ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು. ಅವುಗಳಿಂದಲೇ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು. ಇದಕ್ಕೆಲ್ಲ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ನಮ್ಮ ಚನ್ನಪಟ್ಟಣದಲ್ಲಿ ನಮ್ಮ ಜನ ಇಂಥ ಆಮಿಷಗಳಿಗೆ ಮರುಳಾಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲಾ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್​ಗಳನ್ನು ಹಂಚಿಕೆ ಮಾಡಲಾಯಿತು ಎಂದರು.

ಈವರೆಗೂ ರಾಜ್ಯದಲ್ಲಿ ಇಂಥ ಅಕ್ರಮ ಸರ್ಕಾರ ಬಂದಿಲ್ಲ. ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಿ ಈ ಸರ್ಕಾರವನ್ನು ವಜಾ ಮಾಡಬೇಕು ಎಂದ ಅವರು, ಕೇಂದ್ರ ಸರ್ಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಲೋಕಸಭೆಯಲ್ಲಿ ಸ್ಪರ್ಧೆ ಮಾಡೋಲ್ಲ: ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಾನು ವಿಧಾನಸಭೆಯಲ್ಲಿ ಚನ್ನಪಟ್ಟಣದಿಂದ ಗೆದ್ದಿದ್ದೇನೆ. ಚನ್ನಪಟ್ಟಣದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಆಲೋಚನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್​ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೊಣ ಎಂದರು.

ಇದಲ್ಲದೆ ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಸರ್ಕಾರ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು?. ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು. ಆ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು, ಅಲ್ಲವೇ? ಎಂದು ಹೇಳಿದರು.

ಇದನ್ನೂ ಓದಿ:ಕಾವೇರಿ ನದಿ ನೀರು ಹಂಚಿಕೆ ವಿವಾದ.. ನಾಳೆ ಕೇಂದ್ರ ಜಲಶಕ್ತಿ ಸಚಿವ ಶೇಖಾವತ್​​ ಭೇಟಿ: ಡಿಸಿಎಂ ಶಿವಕುಮಾರ್

Last Updated : Sep 20, 2023, 8:20 PM IST

ABOUT THE AUTHOR

...view details