ಕರ್ನಾಟಕ

karnataka

ಇಂದು ಚನ್ನಪಟ್ಟಣ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಆಡಳಿತದ ಚುಕ್ಕಾಣಿ ಯಾರಿಗೆ?

By

Published : Nov 8, 2021, 9:11 AM IST

ಚುನಾವಣೆ ನಡೆದ 7 ತಿಂಗಳ ಬಳಿಕ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕಾಲ ಕೂಡಿ ಬಂದಿದ್ದು, ಎಲ್ಲರ ಚಿತ್ತ ನಗರಸಭೆಯತ್ತ ನೆಟ್ಟಿದೆ. ಏ. 27ರಂದೇ ನಗರಸಭೆಗೆ ಚುನಾವಣೆ ನಡೆದಿತ್ತಾದರೂ ಕೋವಿಡ್​​ ಕಾರಣದಿಂದಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಲಾಗಿತ್ತು.

Ramnagar
ರಾಮನಗರ

ರಾಮನಗರ:ಚನ್ನಪಟ್ಟಣ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಕೊನೆೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಚುನಾವಣೆ ನಿಗದಿಯಾಗಿದೆ. ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ, ಆಕಾಂಕ್ಷಿಗಳು ಚುರುಕಾಗಿದ್ದು, ತೆರೆಮೆರೆಯಲ್ಲೇ ಕಸರತ್ತು ಆರಂಭಿಸಿದ್ದಾರೆ.

ನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಏ. 27ರಂದೇ ನಗರಸಭೆಗೆ ಚುನಾವಣೆ ನಡೆದಿತ್ತಾದರೂ ಕೋವಿಡ್​​ ಕಾರಣದಿಂದಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಲಾಗಿತ್ತು. ಚುನಾವಣೆ ನಡೆದ 7 ತಿಂಗಳ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಕಾಲ ಕೂಡಿ ಬಂದಿದ್ದು, ಎಲ್ಲರ ಚಿತ್ತ ನಗರಸಭೆಯತ್ತ ನೆಟ್ಟಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ

ಕೋವಿಡ್​​ ಪ್ರಕರಣಗಳು ಏರುಗತಿಯಲ್ಲಿದ್ದ ಏಪ್ರಿಲ್ ತಿಂಗಳಿನಲ್ಲಿ ನಗರಸಭೆಗೆ ಚುನಾವಣೆ ನಡೆದಿತ್ತು. ಬಹುತೇಕ ವಾರ್ಡ್​ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಹೆಚ್ಚಿನ ವಾರ್ಡುಗಳಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಗೆಲುವಿನ ನನಗೆ ಬೀರಿತ್ತು. 31 ಸದಸ್ಯ ಬಲದ ನಗರಸಭೆಯಲ್ಲಿ 16 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಪಕ್ಷೇತರರಾಗಿ ಒಬ್ಬರು ಗೆಲುವು ಸಾಧಿಸಿದ್ದರು.

ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ದಂಡು:

ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಅಧ್ಯಕ್ಷ ಗಾದಿಗಾಗಿ ಜೆಡಿಎಸ್‌ನಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. 14ನೇ ವಾರ್ಡ್​ನಿಂದ ಗೆಲುವು ಸಾಧಿಸಿರುವ ಶ್ರೀನಿವಾಸ್‌ಮೂರ್ತಿ, 26ನೇ ವಾರ್ಡ್​ನಿಂದ ಗೆಲುವು ಸಾಧಿಸಿರುವ ಪ್ರಶಾಂತ್, 12ನೇ ವಾರ್ಡ್​ನ ಲೋಕೇಶ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಜೆಡಿಎಸ್‌ಗೆ ಶಾಕ್ ಕೊಡಲು ಯತ್ನ:

ನಗರಸಭೆಯಲ್ಲಿ ಅಧಿಕಾರ ಹಿಡಿಯಲು ಬೇಕಾದ ಸ್ಪಷ್ಟ ಬಹುಮತ ಜೆಡಿಎಸ್‌ಗೆ ಇದ್ದರೂ ರಾಜಕೀಯದಲ್ಲಿ ಕೊನೆಯ ಕ್ಷಣದಲ್ಲಿ ಏನಾದರೂ ಆಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್‌ಗೆ ಅಧಿಕಾರ ತಪ್ಪಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರನ್ನು ಒಗ್ಗೂಡಿಸಿಕೊಂಡು ಅಧಿಕಾರ ಹಿಡಿಯುವ ಕುರಿತು ಪ್ರಯತ್ನಗಳು ಸದ್ದಿಲ್ಲದೇ ನಡೆಯುತ್ತಿವೆ ಎನ್ನಲಾಗ್ತಿದೆ.

ನಗರ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ತಲಾ 7 ಸ್ಥಾನಗಳಲ್ಲಿ ಜಯಗಳಿಸಿದ್ದು, ಇವರ ಜತೆ 30ನೇ ವಾರ್ಡ್​ನ ಪಕ್ಷೇತರ ಸದಸ್ಯೆಯನ್ನು ಬಳಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವ ಮಾತುಗಳು ಕೇಳಿ ಬರುತ್ತಿವೆ.

ನಗರಸಭೆ ಚುನಾವಣೆಯಲ್ಲಿ ಸದಸ್ಯರ ಜತೆ ಕ್ಷೇತ್ರದ ಶಾಸಕರು, ಸಂಸದರು ಮತದಾನದ ಹಕ್ಕು ಹೊಂದಿದ್ದಾರೆ. ಇದರೊಂದಿಗೆ ವಿಧಾನಪರಿಷತ್ ಸದಸ್ಯರು ಸಹ ಯಾವುದಾರೂ ಒಂದು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕನ್ನು ಪಡೆಯಬಹುದಾಗಿರುತ್ತದೆ. ಕಾಂಗ್ರೆಸ್-ಬಿಜೆಪಿ ಪಕ್ಷೇತರ ಅಭ್ಯರ್ಥಿ ಜತೆಗೆ ವಿಧಾನಪರಿಷತ್ ಸದಸ್ಯರಾದ ಯೋಗೇಶ್ವರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮತಗಳನ್ನು ಬಳಸಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎಂಬ ಲೆಕ್ಕಾಚಾರಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ದಳಪತಿ ಅಂಗಳದಲ್ಲಿ ಚೆಂಡು:

ನಗರ ಸಭೆಯಲ್ಲಿ ಜೆಡಿಎಸ್ 16 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿದ್ದು, ಈ ಬಾರಿ ಜೆಡಿಎಸ್ ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಪಕ್ಕಾ ಎನ್ನುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಜೆಡಿಎಸ್‌ಗೆ ಸ್ಪಷ್ಟ ಬಹುಮತ ಇರುವುದರಿಂದ ಆಕಾಂಕ್ಷಿಗಳು ಹೆಚ್ಚಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಗಾದಿಗಾಗಿ ತಮ್ಮದೇಯಾದ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಯಾರೂ ಏನೇ ಹೇಳಿದರೂ ಮಾಜಿ ಮುಖ್ಯಮಂತ್ರಿಗಳು ಮತ್ತು ಕ್ಷೇತ್ರದ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಅವರ ತೀರ್ಮಾನವೇ ಅಂತಿಮವಾಗಿದ್ದು, ಹೆಚ್‌ಡಿಕೆ ಕೃಪಾಕಟಾಕ್ಷ ಯಾರಿಗೆ ಒಲಿಯದೆ ಎಂಬುದನ್ನು ಕಾದು ನೋಡಬೇಕಿದೆ.

ABOUT THE AUTHOR

...view details