ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಇಂದು ಏನಾದರೂ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ, ಬಿಜೆಪಿ 130-135 ಸ್ಥಾನ ಗೆಲ್ಲಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಪ್ರೇರಣಾ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಮತ್ತೊಂದೆಡೆ ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದು ಕೊಂಡಿದೆ. ಜನರ ಹಿತವನ್ನು ಮರೆತಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಇಂದು ವಿಧಾನಸಭೆ ಚುನಾವಣೆ ನಡೆದರೆ, 130-135 ಸ್ಥಾನಗಳಲ್ಲಿ ಪಕ್ಷ ಆರಿಸಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ರಾಜ್ಯದಲ್ಲಿ ಬಿಜೆಪಿಗೆ ಉತ್ತಮವಾದ ವಾತಾವರಣ ಸೃಷ್ಟಿಯಾಗಿದೆ. ನಡ್ಡಾ ಅವರು ನನಗೆ ಫೋನ್ ಮಾಡಿ ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಹೇಳಿದಾಗ ನಮಗೆ ನಂಬಲು ಆಗಲಿಲ್ಲ. ಆದರೆ ವಿಜಯೇಂದ್ರ ಬಂದು ಹೇಳಿದಾಗ ನನಗೆ ಗೊತ್ತಾಯಿತು. ಹಿಂದಿನ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತು ನಾನು ಈಗ ಮಾತನಾಡಲ್ಲ. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆದ್ದು ಬಿಜೆಪಿ ಶಕ್ತಿ ಏನು ಎಂದು ತೋರಿಸೋಣ ಎಂದರು.
ಇದೇ ವೇಳೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ವಿಜಯೇಂದ್ರ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ನೋಡಿದ ಕಾಂಗ್ರೆಸ್ ಎದೆ ಒಡೆದು ಹೋಗುತ್ತಿದೆ. ರಾಜ್ಯದ 1 ಕೋಟಿ ಕಾರ್ಯಕರ್ತರು ವಿಜಯೇಂದ್ರ ಅವರ ಜೊತೆ ಇದ್ದಾರೆ ಎಂದು ಹೇಳಿದರು.