ಕರ್ನಾಟಕ

karnataka

ಬಾಲ್ಯ ವಿವಾಹ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿ ಕೆ.ಬಿ. ಶಿವಕುಮಾರ್ ಸೂಚನೆ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

By

Published : Oct 7, 2020, 4:35 PM IST

Published : Oct 7, 2020, 4:35 PM IST

DC meeting
DC meeting

ಶಿವಮೊಗ್ಗ: ಬಾಲ್ಯ ವಿವಾಹವನ್ನು ಸಮರ್ಪಕವಾಗಿ ತಡೆಯಲು ಗ್ರಾಮ ಮಟ್ಟದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಮೇಲೆ ನಿರಂತರವಾಗಿ ನಿಗಾ ಇರಿಸುವ ಅಗತ್ಯವಿದೆ. ಏಪ್ರಿಲ್‌ನಿಂದ ಸೆಪ್ಟಂಬರ್ ಅಂತ್ಯದವರೆಗೆ ಒಟ್ಟು 12 ಬಾಲ್ಯ ವಿವಾಹ ಪ್ರಕರಣಗಳು ನಡೆದಿದ್ದು, ಎಫ್‍ಐಆರ್ ದಾಖಲಿಸಲಾಗಿದೆ. ಈ ಅವಧಿಯಲ್ಲಿ 48 ಬಾಲ್ಯ ವಿವಾಹ ಪ್ರಕರಣಗಳನ್ನು ಯಶಸ್ವಿಯಾಗಿ ತಡೆಯಲಾಗಿದೆ. ಗ್ರಾಮ ಮಟ್ಟದಲ್ಲಿ ಪಿಡಿಒಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೊಲೀಸರು ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಕಳೆದ ತ್ರೈಮಾಸಿಕ ಅವಧಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ 26 ಪ್ರಕರಣಗಳು ದಾಖಲಾಗಿವೆ. 2012 ರ ಮಾರ್ಚ್‍ನಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 684 ಪ್ರಕರಣಗಳು ವರದಿಯಾಗಿದ್ದು, 270 ಪ್ರಕರಣಗಳು ಖುಲಾಸೆಗೊಂಡು 26 ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗಿದೆ. ಇನ್ನೂ 344 ಪ್ರಕರಣಗಳ ತನಿಖೆ ಮತ್ತು ವಿಚಾರಣೆ ಬಾಕಿಯಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈದ್ಯಕೀಯ ಹಾಗೂ ಇತರೆ ಅಗತ್ಯ ವೆಚ್ಚಕ್ಕಾಗಿ ಗರಿಷ್ಠ 10 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಜೆ.ಜೆ.ಸುರೇಶ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜೆ ಜೆ ಕಾಯ್ದೆಯಡಿ ನೋಂದಣಿಯಾದ 37 ಮಕ್ಕಳ ಪಾಲನಾ ಸಂಸ್ಥೆಗಳಿವೆ. ಕೋವಿಡ್ ಹಿನ್ನೆಲೆಯಲ್ಲಿ 1,121 ಮಕ್ಕಳನ್ನು ಅವರ ಪಾಲಕರ ವಶಕ್ಕೆ ಕಳುಹಿಸಲಾಗಿದ್ದು, ಪ್ರಸ್ತುತ 212 ಮಕ್ಕಳು ಮಾತ್ರ ಕೇಂದ್ರದಲ್ಲಿದ್ದಾರೆ. ಈಗಾಗಲೇ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಪ್ರಸ್ತುತ ತ್ರೈಮಾಸಿಕದಲ್ಲಿ ಕೌಟುಂಬಿಕ ದೌರ್ಜನ್ಯ 7, ಅತ್ಯಾಚಾರ 15, ಲೈಂಗಿಕ ಕಿರುಕುಳ 9 ಸೇರಿದಂತೆ ಒಟ್ಟು 58 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 56 ಮಂದಿಗೆ ಕಾನೂನು, ವೈದ್ಯಕೀಯ, ಪೊಲೀಸ್ ನೆರವು ನೀಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿರುವ ಸಖಿ ಕೇಂದ್ರದಲ್ಲಿ ದಿನದ 24 ಗಂಟೆ ಪೊಲೀಸ್ ವ್ಯವಸ್ಥೆ ಮಾಡುವಂತೆ ಡಿಸಿ ತಿಳಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಂಕ್ರಪ್ಪ ಡೊನ್ನರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details