ಶಿವಮೊಗ್ಗ: ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ, ತ್ಯಾಜ್ಯ ವಿಲೇವಾರಿಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಇದುವರೆಗೆ 271 ಗ್ರಾ.ಪಂ.ಗಳ ಪೈಕಿ ಕೇವಲ 53 ಗ್ರಾ.ಪಂ.ಗಳು ಘನತ್ಯಾಜ್ಯ ಘಟಕಗಳಿಗೆ ಜಮೀನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿವೆ. ಅದರಲ್ಲಿ 48 ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ. ಕೇವಲ 12 ಗ್ರಾ.ಪಂ.ಗಳು ಕಾರ್ಯ ಆರಂಭಿಸಿದ್ದು, ಜಮೀನು ಅಂತಿಮಗೊಳಿಸದ ಪಂಚಾಯಿತಿಗಳು ತಮ್ಮಲ್ಲಿರುವ ಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಬೇಕು ಎಂದು ತಿಳಿಸಿದರು.
ಈಗಾಗಲೇ ಅನುದಾನ ಬಿಡುಗಡೆ ಆಗಿರುವ ಗ್ರಾ.ಪಂ.ಗಳು ವಾಹನ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಸೇರಿದಂತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ‘ಮನೆ ಮನೆಗೆ ಗಂಗೆ ಯೋಜನೆ’ಯಡಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯವನ್ನು ಆಯಾ ಗ್ರಾ.ಪಂ.ಗಳೇ ಇನ್ನು ಮುಂದೆ ನಿರ್ವಹಿಸಬೇಕು. ಇದಕ್ಕಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು.
ಪಿಡಿಒಗಳಿಗೆ ಎಚ್ಚರಿಕೆ