ಕರ್ನಾಟಕ

karnataka

ಗ್ರಾ.ಪಂ.ಗಳಲ್ಲಿನ ತ್ವರಿತ ಘನತ್ಯಾಜ್ಯ ವಿಲೇವಾರಿಗೆ ಕೆ.ಎಸ್.ಈಶ್ವರಪ್ಪ ಸೂಚನೆ

By

Published : May 6, 2020, 10:59 PM IST

ಪಿಡಿಒಗಳು ಕಡ್ಡಾಯವಾಗಿ ಪ್ರತಿದಿನ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಗೆ ಸ್ಪಂದಿಸಬೇಕು. ತಮ್ಮ ವರ್ತನೆಯನ್ನು ತಿದ್ದಿಕೊಳ್ಳದ ಪಿಡಿಒಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಸಚಿವ ಕೆ.ಎಸ್.ಈಶ್ವರಪ್ಪಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ, ತ್ಯಾಜ್ಯ ವಿಲೇವಾರಿಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಇದುವರೆಗೆ 271 ಗ್ರಾ.ಪಂ.ಗಳ ಪೈಕಿ ಕೇವಲ 53 ಗ್ರಾ.ಪಂ.ಗಳು ಘನತ್ಯಾಜ್ಯ ಘಟಕಗಳಿಗೆ ಜಮೀನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿವೆ. ಅದರಲ್ಲಿ 48 ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ. ಕೇವಲ 12 ಗ್ರಾ.ಪಂ.ಗಳು ಕಾರ್ಯ ಆರಂಭಿಸಿದ್ದು, ಜಮೀನು ಅಂತಿಮಗೊಳಿಸದ ಪಂಚಾಯಿತಿಗಳು ತಮ್ಮಲ್ಲಿರುವ ಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಬೇಕು ಎಂದು ತಿಳಿಸಿದರು.

ಈಗಾಗಲೇ ಅನುದಾನ ಬಿಡುಗಡೆ ಆಗಿರುವ ಗ್ರಾ.ಪಂ.ಗಳು ವಾಹನ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಸೇರಿದಂತೆ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ‘ಮನೆ ಮನೆಗೆ ಗಂಗೆ ಯೋಜನೆ’ಯಡಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯವನ್ನು ಆಯಾ ಗ್ರಾ.ಪಂ.ಗಳೇ ಇನ್ನು ಮುಂದೆ ನಿರ್ವಹಿಸಬೇಕು. ಇದಕ್ಕಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು.

ಪಿಡಿಒಗಳಿಗೆ ಎಚ್ಚರಿಕೆ

ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ ಶಿವಮೊಗ್ಗ ನಗರದಲ್ಲಿ ವಾಸ್ತವ್ಯವಿದ್ದು, ದೂರವಾಣಿಗೂ ಸಿಗದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಪಿಡಿಒಗಳು ಕಡ್ಡಾಯವಾಗಿ ಪ್ರತಿದಿನ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರ ಕುಂದು-ಕೊರತೆಗೆ ಸ್ಪಂದಿಸಬೇಕು. ತಮ್ಮ ವರ್ತನೆಯನ್ನು ತಿದ್ದಿಕೊಳ್ಳದ ಪಿಡಿಒಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಉದ್ಯೋಗ ಖಾತ್ರಿ ಅನುಷ್ಠಾನ:

ಎನ್‍ಆರ್​ಇಜಿ ಅಡಿ ಈ ವರ್ಷ 218 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ಇದುವರೆಗೆ ಯಾವುದೇ ಗುರಿಯನ್ನು ಸಾಧಿಸಿರುವುದಿಲ್ಲ. ಹಿಂದಿನ ವರ್ಷದ ಅಪೂರ್ಣ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಹೇಳಿದರು.

ತೆರಿಗೆ ನಿಗದಿ ವೈಜ್ಞಾನಿಕವಾಗಿ ಮಾಡಿ:

ಪ್ರತಿ ಗ್ರಾ.ಪಂ. ಎರಡು ವರ್ಷಗಳಿಗೊಮ್ಮೆ ಮೌಲ್ಯ ಮಾಪನ ಮಾಡಿ ತೆರಿಗೆಯನ್ನು ವೈಜ್ಞಾನಿಕವಾಗಿ ಮರು ನಿಗದಿಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅತೀಕ್ ತಿಳಿಸಿದರು.

ABOUT THE AUTHOR

...view details