ಶಿವಮೊಗ್ಗ: ಜಿಲ್ಲೆಯಲ್ಲಿ ಈಗ ಆಕ್ಸಿಜನ್ ಪ್ಲಾಂಟ್ ಇದೆ. ಅದೇ ರೀತಿ ಶಿಕಾರಿಪುರ ಹಾಗೂ ಸಾಗರದಲ್ಲೂ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸೊರಬ ತಾಲೂಕಿನಲ್ಲಿ 50 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಸೊರಬದಲ್ಲಿ 30 ಬೆಡ್ನ ಆಸ್ಪತ್ರೆ ಹಾಗೂ ಆನವಟ್ಟಿಯಲ್ಲಿ 20 ಬೆಡ್ ಆಸ್ಪತ್ರೆ ನಿರ್ಮಿಸಲಾಗುವುದು. ಜಿಲ್ಲೆಯಲ್ಲಿ ಸದ್ಯ ಕೋವಿಡ್ ವ್ಯಾಕ್ಸಿನ್ ಕೊರತೆ ಇದೆ. ಇದನ್ನು ನಿವಾರಿಸಲು ಕ್ರಮ ತೆಗೆದುಕೊಂಡಿದ್ದೇವೆ. ಈ ಕುರಿತು ಜಿಲ್ಲಾ ಪ್ರವಾಸದಲ್ಲಿ ಸಂಸದ ರಾಘವೇಂದ್ರ ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ ಎಂದರು.
ಸಭೆಯಲ್ಲಿ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ, ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ನೀಡುವ ಕೆ- ಶೀಟ್ ನಲ್ಲಿ ಎಲ್ಲಾ ಔಷಧ ನೀಡಿರುವ ಬಗ್ಗೆ ತಿಳಿಸಲಾಗಿರುತ್ತದೆ. ಆದರೆ ವಾಸ್ತವದಲ್ಲಿ ಅಲ್ಲಿ ಅವರಿಗೆ ಯಾವುದೇ ಔಷಧ ನೀಡಿರುವುದಿಲ್ಲ ಎಂಬ ಗಂಭೀರ ಆರೋಪ ಮಾಡಿದರು. ಈ ಕುರಿತು ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಡಿಸಿ ಶಿವಕುಮಾರರಿಗೆ ಸೂಚಿಸಿದರು.
ಸಭೆಯಲ್ಲಿ ಎಂಎಲ್ಸಿ ಆಯನೂರು ಮಂಜುನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೇ ಅಧಿಕಾರಿಗಳು ತಡವರಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಪೊಲೀಸರು ಅಡ್ಡಿ ಪಡಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಸ್ಪಿಗೆ ಸಚಿವ ಈಶ್ಬರಪ್ಪ ತಿಳಿಸಿದರು. ಸಭೆಯಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ, ಎಂಎಲ್ಸಿ ರುದ್ರೇಗೌಡ, ಎಸ್ಪಿ, ಜಿ.ಪಂ ಸಿಇಓ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.