ಬೆಂಗಳೂರು:ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಂಚಾಯತ್ ಅಧಿಕಾರಿಗಳೊಂದಿಗೆ ಎರಡು ದಿನ ವಿಡಿಯೋ ಸಂವಾದ ನಡೆಸಲು ನಿರ್ಧರಿಸಿದ್ದಾರೆ.
ಗ್ರಾಮೀಣ ಭಾಗಗಳ ಪರಿಸ್ಥಿತಿ ಅವಲೋಕಿಸಲು, ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತು ಸೋಂಕು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಮೇ 24 ಮತ್ತು 25ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂವಾದದಲ್ಲಿ ಪಂಚಾಯಿತಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯ ಅಧಿಕಾರಿಗಳು, ಎಲ್ಲಾ ತಾಲೂಕು ಪಂಚಾಯತ್ಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಲು ಸೂಚಿಸಲಾಗಿದೆ.
ಮೇ 24ರಂದು ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳು ಹಾಗೂ ಮೇ 25ರಂದು ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಿಗೆ ವಿಡಿಯೋ ಸಂವಾದ ನಡೆಯಲಿದೆ.