ಕರ್ನಾಟಕ

karnataka

ETV Bharat / state

ಶಿವಮೊಗ್ಗ ಉದ್ಯೋಗ ಮೇಳಕ್ಕೆ ಸಿದ್ಧತೆ: 10ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ಗುರಿ

ಶಿವಮೊಗ್ಗ ಫೆಬ್ರವರಿ 24 ಮತ್ತು 25ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ಮೇಳಕ್ಕೆ ಸುಮಾರು 10 ಸಾವಿರ ಉದ್ಯೋಗಾರ್ಥಿಗಳು ಭಾಗವಹಿಸುವ ಗುರಿಯನ್ನು ಹೊಂದಲಾಗಿದ್ದು, ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

By

Published : Feb 14, 2020, 8:01 PM IST

Preparing for Shimoga Job Fair
ಶಿವಮೊಗ್ಗ ಉದ್ಯೋಗ ಮೇಳಕ್ಕೆ ಸಿದ್ಧತೆ

ಶಿವಮೊಗ್ಗ:ಫೆಬ್ರವರಿ 24 ಮತ್ತು 25ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 10 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ಗುರಿ ಹೊಂದಲಾಗಿದ್ದು, ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ಮೇಳದ ಸಿದ್ಧತೆಗಳ ಪೂರ್ವಭಾವಿ ಸಭೆ ನಡೆಸಿದರು. ಉದ್ಯೋಗ ಮೇಳಕ್ಕೆ ಈಗಾಗಲೇ 4200 ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಿದ್ದಾರೆ. 64 ಕಂಪೆನಿಗಳು ಸಹ ಹೆಸರು ನೊಂದಾಯಿಸಿದ್ದು, 150ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಆಸಕ್ತ ಕಂಪೆನಿಗಳು ಭಾಗವಹಿಸುವಂತೆ ಕೋರಿ ದೊಡ್ಡ ಕಂಪೆನಿಗಳಿಗೆ ಆಹ್ವಾನ ನೀಡುವಂತೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಉದ್ಯಮಿಗಳನ್ನು, ಕೈಗಾರಿಕೆಗಳನ್ನು ಆಹ್ವಾನಿಸುವಂತೆ ಅವರು ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಸಂಸ್ಥೆ ಅವರಿಗೆ ತಿಳಿಸಿದರು.

ನಗರದ ಎನ್‍ಇಎಸ್ ಕಾಲೇಜು ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಇಲ್ಲಿ ಅಗತ್ಯ ಎಲ್ಲಾ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರತಿ ಕಂಪೆನಿಗಳಿಗೆ ಸಂದರ್ಶನ ಆಯೋಜಿಸಲು ಸಾಧ್ಯವಾಗುವಂತೆ ಕೊಠಡಿಗಳನ್ನು ಒದಗಿಸಬೇಕು. ಸ್ಥಳದಲ್ಲಿಯೇ ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಸಲು ಸಾಧ್ಯವಾಗುವಂತೆ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಬಳಸಿಕೊಳ್ಳಬಹುದಾಗಿದೆ. ಎಲ್ಲಾ ಅಭ್ಯರ್ಥಿಗಳಿಗೆ ಬಾರ್‍ಕೋಡ್ ಹೊಂದಿರುವ ಗುರುತಿನ ಪತ್ರವನ್ನು ನೀಡಲಾಗುವುದು.

ಕಂಪೆನಿಗಳ ಪ್ರತಿನಿಧಿಗಳಿಗೆ ವಾಸ್ತವ್ಯದ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಭೋಜನ ವ್ಯವಸ್ಥೆ ಮಾಡಲಾಗುವುದು ಎಂದರು.ಸಮರ್ಪಕ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸಂಪೂರ್ಣ ಸ್ವಚ್ಛತೆಯ ವ್ಯವಸ್ಥೆಯನ್ನು ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾರ್ಥಿಗಳು ಭಾಗವಹಿಸಲು ಉತ್ತಮ ಪ್ರಚಾರ ಕಾರ್ಯ ಕೈಗೊಳ್ಳಬೇಕು.

ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಮಾಹಿತಿಯನ್ನು ಕಳುಹಿಸಿ ಸ್ಥಳೀಯವಾಗಿ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.ಉದ್ಯೋಗ ಮೇಳದ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುವಂತಹ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಲ್ಲಿ ಪದವಿ ಅಂತಿಮ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ಅವರು ಉದ್ಯೋಗ ಮೇಳವನ್ನು ಉದ್ಘಾಟಿಸುವ ಸಾಧ್ಯತೆಯಿದ್ದು, ಶಿಷ್ಟಾಚಾರದ ಪ್ರಕಾರ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ABOUT THE AUTHOR

...view details