ಕರ್ನಾಟಕ

karnataka

ETV Bharat / state

ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರು- ವಿದ್ಯಾರ್ಥಿಗಳ ಸಾಗಾಟ ನಿರ್ಬಂಧ : ಜಿಲ್ಲಾಧಿಕಾರಿ - kannada news

ಕಾನೂನು ಬಾಹಿರವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಜನರ ಸಾಗಾಟ ಮಾಡುವುದನ್ನ ನಿರ್ಬಂಧಿಸಿ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗೆ ಸೂಚನೆ ನೀಡಿಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಕೆ.ಎ. ದಯಾನಂದ.

By

Published : May 11, 2019, 3:10 AM IST

ಶಿವಮೊಗ್ಗ, :ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರನ್ನು ಹಾಗೂ ಶಾಲಾ ಮಕ್ಕಳನ್ನು ನಿಯಮ ಬಾಹಿರವಾಗಿ ಸಾಗಾಟ ಮಾಡುವುದನ್ನ ಸಂಪೂರ್ಣವಾಗಿ ನಿರ್ಬಂಧಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಆನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿ, ಖಾಸಗಿ ಸಾರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು. ಕೈಗಾರಿಕಾ ವಲಯಗಳಲ್ಲಿ , ಕಾಮಗಾರಿ ಕಾರ್ಯಗಳಲ್ಲಿ ತೊಡಗಿರುವ ಕೂಲಿ ಕಾರ್ಮಿಕರು ಮತ್ತು ಕೃಷಿ ಚಟುವಟಿಕೆಗಳಿಗಾಗಿ ಕಾರ್ಮಿಕರನ್ನ ಸರಕು ಸಾಗಾಣಿಕಾ ವಾಹನಗಳಲ್ಲಿ ತುಂಬಿಸಿ ಸಾಗಾಟ ಮಾಡುವುದನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದರು.

ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಅನಧಿಕೃತ ವಾಹನಗಳಲ್ಲಿ ಕರೆದುಕೊಂಡು ಹೋಗುವುದನ್ನು ಸಹ ನಿರ್ಬಂಧಿಸಲಾಗಿದ್ದು, ಇನ್ನು ಮುಂದೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿರುವ ವಾಹನಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬಹುದಾಗಿದೆ. ಖಾಸಗಿ ವಾಹನಗಳಲ್ಲಿ ಸೀಟು ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ವಿದ್ಯಾರ್ಥಿಗಳನ್ನು ಕರೆದು ಹೋಗಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವ ಜಿಲ್ಲಾಧಿಕಾರಿ ಕೆ.ಎ. ದಯಾನಂದ

ಮಾಚೇನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಪ್ರತಿ ನಿತ್ಯ 70 ರಿಂದ 80 ಅನಧಿಕೃತ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಯಾವುದೇ ಕೈಗಾರಿಕಾ ಪ್ರದೇಶಗಳಲ್ಲಿ ಇಂತಹ ಸಾಗಾಟ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಕಾರ್ಮಿಕರ ಪ್ರಯಾಣಕ್ಕಾಗಿ ಕೈಗಾರಿಕಾ ಸಂಸ್ಥೆಗಳು ಕೆ.ಎಸ್.ಆರ್.ಟಿ.ಸಿ ಬಸ್‍ಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಾಲಾ ಕಾಲೇಜುಗಳು ಆರಂಭವಾಗುವ ಮುನ್ನ ವಿದ್ಯಾರ್ಥಿಗಳು ಯಾವ ವಾಹನದಲ್ಲಿ ಶಾಲೆಗೆ ಆಗಮಿಸುತ್ತಾರೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು, ನಿಯಮಬಾಹಿರವಾಗಿ ಸಾಗಾಟ ಮಾಡುವ ವಾಹನಗಳ ಛಾಯಾಚಿತ್ರ ತೆಗೆದು ಪ್ರಕರಣ ದಾಖಲಿಸಬೆಕು, ಕಡ್ಡಾಯವಾಗಿ ಶಾಲಾ ಆಡಳಿತ ಮಂಡಳಿ ದೂರದಿಂದ ಬರುವ ಮಕ್ಕಳಿಗೆ ವಾಹನ ಸೌಲಭ್ಯ ನೀಡಬೇಕು ಎಂದು ಸೂಚನೆ ನೀಡಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಈ ಸೌಲಭ್ಯ ಪಡೆದುಕೊಳ್ಳಬೇಕು. ಒಂದು ವೇಳೆ ವಾಹನ ಅವಘಡಗಳು ಸಂಭವಿಸಿದ ಸಂದರ್ಭಗಳಲ್ಲಿ ಶಾಲಾ ಆಡಳಿತ ಮಂಡಳಿಯನ್ನು ನೇರವಾಗಿ ಹೊಣೆಯಾಗಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪರ್ಯಾಯ ವ್ಯವಸ್ಥೆ

ಸರಕು ಸಾಗಾಣಿಕೆ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವ ಮಾರ್ಗಗಳ ಮಾಹಿತಿಯನ್ನು ನೀಡಿದರೆ ಅಂತಹ ಕಡೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ನಗರ ಸಾರಿಗೆ ಬಸ್‍ಗಳಿಗೆ ಒಳಮಾರ್ಗಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆ ಸಂಚಾರ ವ್ಯಾಪ್ತಿಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶೇಖರ್, ಸಾರಿಗೆ ಇಲಾಖೆ ಜಂಟಿ ಆಯುಕ್ತ ಶಿವರಾಜ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details