ಕರ್ನಾಟಕ

karnataka

ETV Bharat / state

ಎಸಿಬಿ ರಾಜ್ಯ ಸರ್ಕಾರದ ಕೈಗೊಂಬೆ: ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಪುಟ್ಟರಾಜು ಆರೋಪ

ಎಸಿಬಿ ರಾಜ್ಯ ಸರ್ಕಾರದ ಕೈಗೊಂಬೆಯಾಗಿದೆ. ಇದರಿಂದ ಭ್ರಷ್ಟ ಅಧಿಕಾರಿಗಳನ್ನು ಹಾಗೂ ಭ್ರಷ್ಟ ರಾಜಕಾರಣಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಪುಟ್ಟರಾಜು ಆರೋಪಿಸಿದ್ದಾರೆ.

By

Published : Apr 27, 2019, 9:53 PM IST

ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಪುಟ್ಟರಾಜು

ತುಮಕೂರು:ಎಸಿಬಿ ದಾಳಿಯಲ್ಲಿ ಜೈಲುಪಾಲಾಗಿದ್ದ ತುಮಕೂರು ಮಹಾನಗರ ಪಾಲಿಕೆಯ ಎಇಇ ಮರಿಯಪ್ಪ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಮತ್ತೆ ಸರ್ಕಾರಿ ನೌಕರಿ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮಾಡಿರುವುದು ಸರಿಯಲ್ಲ. ಎಸಿಬಿ ರಾಜ್ಯ ಸರ್ಕಾರದ ಕೈಗೊಂಬೆಯಾಗಿದೆ. ಇದರಿಂದ ಭ್ರಷ್ಟ ಅಧಿಕಾರಿಗಳನ್ನು ಹಾಗೂ ಭ್ರಷ್ಟ ರಾಜಕಾರಣಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಜಗದೀಶ್ ಎಂಬುವವರಿಂದ ಮಹಾನಗರ ಪಾಲಿಕೆ ಸಹಾಯಕ ಎಂಜಿನಿಯರ್ ಮರಿಯಪ್ಪ 10 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರೂ ಅವರನ್ನು ಹತ್ತರಿಂದ ಹನ್ನೆರಡು ದಿನಗಳ ಕಾಲ ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿತ್ತು. ನಂತರ ಜಾಮೀನು ಪಡೆದು ಹೊರ ಬಂದಿದ್ದಾರೆ ಎಂದರು.

ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಪುಟ್ಟರಾಜು

ಕಾನೂನಿನ ಪ್ರಕಾರ ಯಾವುದೇ ಸರ್ಕಾರಿ ನೌಕರ ಕ್ರಿಮಿನಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 48 ಗಂಟೆಗಳ ಕಾಲ ಕಾರಾಗೃಹ ವಾಸ ಅನುಭವಿಸಿದ್ದರೆ ಅಂತಹ ನೌಕರನನ್ನು ಎಸಿಬಿ ಇಲಾಖೆಯು ಅನುಮತಿ ನೀಡುವವರೆಗೂ ಆತನನ್ನು ಅಮಾನತು ಮಾಡಬೇಕು ಅಥವಾ ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಬೇಕು. ಆದರೆ ಮರಿಯಪ್ಪ ಅವರು ಜೈಲಿನಿಂದ ಹೊರಬಂದ ಕೂಡಲೇ ಹಾಲಿ ಜಾಗಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಅಮಾನತಿನಲ್ಲಿ ಇಡದಿದ್ದರೆ ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ರಾಜಕಾರಣಿಗಳ ಬೆಂಬಲದಿಂದ ಆತನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪರಿಗಣಿಸಬೇಕಾಗುತ್ತದೆ ಎಂದರು.

ಯಾವುದೇ ರಾಜಕಾರಣಿಗಳ ಬೆಂಬಲ ಇಲ್ಲದವರ ಮೇಲೆ, ಕೆಳಮಟ್ಟದ ಅಧಿಕಾರಿಗಳನ್ನು ಮಾತ್ರ ಅಮಾನತಿನಲ್ಲಿ ಇಡುವ ಎಸಿಬಿ ಅಧಿಕಾರಿಗಳು, ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಎಸಿಬಿಯ ಮೇಲೆ ಇಟ್ಟಿರುವ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದರು. ಈ ನಿಟ್ಟಿನಲ್ಲಿ ಸರ್ಕಾರ ಮರಿಯಪ್ಪ ಅವರ ಮೇಲೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details