ತುಮಕೂರು: ಈ ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಲಾಗಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದ್ದು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಶಾಸಕ ಡಾ. ಕೆ ಎಚ್ ರಂಗನಾಥ್ ಎಚ್ಚರಿಸಿದ್ದಾರೆ.
ಕುಣಿಗಲ್ ತಾಲೂಕಿನ ಚಟ್ಟನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಜನವರಿ 5ರಂದು ಕುಣಿಗಲ್ ತಾಲೂಕಿನ ಕಗ್ಗೆರೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡುವ ಸಾಧ್ಯತೆಗಳಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ಜನರು ಪಕ್ಷಾತೀತವಾಗಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.
ಇತ್ತೀಚಿಗೆ ಯಡಿಯೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ವೇದಿಕೆಯಲ್ಲಿಯೇ ಕ್ಷೇತ್ರದ ವ್ಯಾಪ್ತಿಯ ರಸ್ತೆ ಕಾಮಗಾರಿಗಳಿಗೆ ಮತ್ತು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ಕಾಂಗ್ರೆಸ್ ,ಜೆಡಿಎಸ್ ಸಮಿಶ್ರ ಸರ್ಕಾರ ಬಿಡುಗಡೆಗೊಳಿಸಿದ್ದ 750 ಕೋಟಿ ರೂ. ಅನುದಾನದ ಕುರಿತು ಬಿಜೆಪಿ ಸರ್ಕಾರ ತಡೆ ಹಿಡಿದಿರುವ ಬಗ್ಗೆ ಸಿಎಂ ಗಮನ ಸೆಳೆದಿದ್ದೆ ಎಂದರು.
ಅಲ್ಲದೇ, ಕುಣಿಗಲ್ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದೆ. ಆಗ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಮುಖ್ಯಮಂತ್ರಿಗಳು ಕ್ಯಾರೆ ಎಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹೀಗಾಗಿ ಈ ಬೆಳವಣಿಗೆಯಿಂದ ಬೇಸತ್ತಿರುವ ಕ್ಷೇತ್ರದ ಜನರು ಪಕ್ಷತೀತವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದರು.