ತುಮಕೂರು: ಜಿಲ್ಲೆಯ ಬಗ್ಗೆ ಸಚಿವ ನಾರಾಯಣ ಗೌಡ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಭಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ನಿಂದ ಲಾಕ್ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೆ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೇ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ ಎಂದರು.
ತುಮಕೂರಿನಲ್ಲಿ ಸ್ಮಾರ್ಟ್ಸಿಟಿ ವತಿಯಿಂದ ಭವ್ಯವಾದ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬೆಂಗಳೂರಿನಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದ್ದು, ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶೀಘ್ರ ಮುಗಿಯಬೇಕು ಎಂದು ಸೂಚಿಸಿದರು.