ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ರಣ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕರಾವಳಿ ಭಾಗದ ಹೊನ್ನಾವರ ಹಾಗೂ ಕುಮಟಾ ತಾಲೂಕಿನ ಹಲವು ಗ್ರಾಮದಲ್ಲಿ ಪ್ರವಾಹ ಉಂಟಾಗಿದೆ. ಕಾಳಿ ನದಿಗೆ ಯಥೇಚ್ಚವಾಗಿ ನೀರು ಹರಿದುಬರುತ್ತಿದ್ದು ಕದ್ರಾ ಜಲಾಶಯದಿಂದ ನೀರನ್ನು ನಿರಂತರವಾಗಿ ಹೊರಬಿಡಲಾಗುತ್ತಿದೆ. ಹೊನ್ನಾವರ ತಾಲೂಕಿನಲ್ಲಿ ಶರಾವತಿ ನದಿ ಹಾಗೂ ಗುಂಡಬಾಳ ಹೊಳೆ ಉಕ್ಕಿ ಹರಿದು ಸಾಲ್ಕೋಡ, ಕಡತೋಕ, ಭಾಸ್ಕೇರಿ, ಕೆಕ್ಕಾರ, ಮುರೂರು, ಊರಕೇರಿ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗಿವೆ.
ನದಿನೀರು ಮನೆ ಹಾಗೂ ತೋಟ, ಗದ್ದೆಗಳಿಗೆ ನುಗ್ಗಿದೆ. ಜಿಲ್ಲಾಡಳಿತ ನೆರೆ ಸೃಷ್ಟಿಯಾದ ಸುಮಾರು 14 ಗ್ರಾಮದ 334 ಜನರನ್ನು ಈಗಾಗಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ. ಮಳೆ ಹೀಗೆಯೇ ಮುಂದುವರೆದರೆ ಅಂಕೋಲಾ ಹಾಗೂ ಕಾರವಾರ ತಾಲೂಕಿನಲ್ಲಿ ನೆರೆ ಸೃಷ್ಟಿಯಾಗಿ ಹಲವೆಡೆ ಹಾನಿ ಸಂಭವಿಸುವ ಸಾಧ್ಯತೆ ಇದೆ.
ರಸ್ತೆ ಕುಸಿತ-ವಾಹನ ಸಂಚಾರ ಬಂದ್: ನಿರಂತರ ಮಳೆಯಿಂದ ಹೊನ್ನಾವರ ತಾಲೂಕಿನ ಗೆರುಸೊಪ್ಪ ಬಳಿಯ ಸೂಳೆಮುರ್ಖಿ ಬಳಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ರಸ್ತೆ ಕುಸಿದಿದೆ. ಇದು ಸಾಗರ ಹಾಗೂ ಹೊನ್ನಾವರ ನಡುವಿನ ಸಂಪರ್ಕ ರಸ್ತೆಯಾಗಿದೆ. ಸದ್ಯ ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ಜಿಲ್ಲಾಡಳಿತ ಬಂದ್ ಮಾಡಿದೆ. ಪರ್ಯಾಯ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.