ಕಾರವಾರ: ಗಣೇಶ ಚತುರ್ಥಿ ವೇಳೆ ಗಣಪತಿ ಮೂರ್ತಿಗಳನ್ನಿಟ್ಟು ಪೂಜೆ ಮಾಡುವುದು ಸಾಮಾನ್ಯ. ಆದ್ರೆ, ಈಗಾಗಲೇ ಚೌತಿ ಹಬ್ಬ ಮುಗಿದು ಐದಾರು ತಿಂಗಳು ಕಳೆದಿವೆ. ಮತ್ತೆ ಹಬ್ಬ ಬರಬೇಕು ಅಂದ್ರೆ ಸಾಕಷ್ಟು ತಿಂಗಳು ಕಳೆಯಬೇಕು. ಆದರೂ ಕರಾವಳಿ ನಗರಿ ಕಾರವಾರದ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಸ್ಥಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಘ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣಪತಿ ಹುಟ್ಟಿದ ದಿನ ಎಂದೇ ಹೇಳಲಾಗುವ ಮಾಘ ಚೌತಿಯಂದು ಗಣೇಶ ಚತುರ್ಥಿ ಮಾದರಿಯಲ್ಲೇ ಗಣಪತಿ ಮೂರ್ತಿಯನ್ನಿಟ್ಟು ಪೂಜೆ ಸಲ್ಲಿಸುವ ಸಂಪ್ರದಾಯ ಕಾರವಾರ ತಾಲೂಕಿನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಾಘ ಚೌತಿಯಂದು ಪ್ರತಿಷ್ಠಾಪಿಸುವ ಮೂರ್ತಿಯನ್ನು ಹರಕೆ ಗಣಪತಿ ಎಂದೇ ಹೇಳಲಾಗುತ್ತದೆ.
"ಇಷ್ಟಾರ್ಥಗಳ ಈಡೇರಿಕೆಗಾಗಿ ಹರಕೆ ಹೊತ್ತುಕೊಂಡವರು ಹಾಗೂ ಗಣೇಶ ಚತುರ್ಥಿಯ ಸಮಯದಲ್ಲಿ ನಾನಾ ಕಾರಣಗಳಿಂದ ಮೂರ್ತಿ ಪ್ರತಿಷ್ಠಾಪಿಸಲು ಸಾಧ್ಯವಾಗದೇ ಇರುವವರು ಮಾಘ ಚೌತಿಯಂದು ಒಂದು ದಿನದ ಮಟ್ಟಿಗೆ ಗಣಪನ ಮೂರ್ತಿಯನ್ನಿಟ್ಟು ಪೂಜೆ ಮಾಡುತ್ತಾರೆ. ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ಒಂದೇ ದಿನ ಇರಿಸಿ, ರಾತ್ರಿ ವೇಳೆಗೆ ನಿಮಜ್ಜನೆ ಮಾಡಲಾಗುತ್ತದೆ. ಈ ಮೂಲಕ ಮಾಘ ಚತುರ್ಥಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ" ಎನ್ನುತ್ತಾರೆ ಅರ್ಚಕ ಅನೂಪ್ ನೇತಲ್ಕರ್.
ಇದನ್ನೂ ಓದಿ:ಕಡಲನಗರಿಯಲ್ಲಿ 'ಮಾಘ' ಚೌತಿ .. ಗಣಪನ ಮೂರ್ತಿಯೊಂದಿಗೆ ಜನರ ಸಂಭ್ರಮ!