ಕರ್ನಾಟಕ

karnataka

By

Published : Dec 2, 2022, 6:56 PM IST

ETV Bharat / state

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಲ್ಲಿಕೆಯಾಗದ ಪ್ರಸ್ತಾವನೆ: ಮೂಗಿಗೆ ತುಪ್ಪ‌ ಸವರಿತೆ ಸರ್ಕಾರ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ವರದಿಯ ಪ್ರತಿ ಕೋರಿ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿಯೊಂದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈ ಬಗ್ಗೆ ಆರೋಗ್ಯಾಧಿಕಾರಿಗಳಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಉತ್ತರಿಸಿದೆ. ಈ ಕುರಿತು ಒಂದು ಸ್ಪೆಷಲ್​ ರಿಪೋರ್ಟ್ ಇಲ್ಲಿದೆ ನೋಡಿ.

ಆರೋಗ್ಯ ಸಚಿವ ಡಾ ಸುಧಾಕರ್
ಆರೋಗ್ಯ ಸಚಿವ ಡಾ ಸುಧಾಕರ್

ಕಾರವಾರ (ಉತ್ತರಕನ್ನಡ): ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರಕನ್ನಡ ಜಿಲ್ಲೆಯ ಜನ ಬೀದಿಗಿಳಿದು ಹೋರಾಟ ನಡೆಸಿದ್ದರು. ಟ್ವಿಟರ್ ಅಭಿಯಾನ, ಪ್ರತಿಭಟನೆಗಳು ತೀವ್ರಗೊಂಡ ಕಾರಣ ಸರ್ಕಾರ ಕೂಡ ಮಣಿದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಮಾತ್ರವಲ್ಲದೇ ಸ್ವತಃ ಆರೋಗ್ಯ ಸಚಿವರೇ ಇತ್ತೀಚೆಗೆ ಉತ್ತರಕನ್ನಡಕ್ಕೆ ಆಗಮಿಸಿ ಜಾಗದ ಪರಿಶೀಲನೆ ಕೂಡ ನಡೆಸಿದ್ದರು.

ಆದರೆ, ಇದೀಗ ಸೂಪರ್ ಸ್ಪೆಷಾಲಿಟಿ ಅಗತ್ಯತೆ ಬಗ್ಗೆ ಸರ್ಕಾರಕ್ಕೆ ಆರೋಗ್ಯ ಅಧಿಕಾರಿಗಳಿಂದ ಪ್ರಸ್ತಾವನೆಯೇ ಸಲ್ಲಿಕೆಯಾಗದಿರುವ ವಿಚಾರ ಬೆಳಕಿಗೆ ಬಂದಿದೆ.

ಹೌದು, ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹಲವು ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಅದರಲ್ಲಿಯೂ ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಹೆಚ್ಚಾದ ಅಪಘಾತ, ಆಂಬುಲೆನ್ಸ್ ತೊಂದರೆ ಸೇರಿದಂತೆ ಇನ್ನಿತರ ಕಾರಣಗಳಿಂದ ಜಿಲ್ಲೆಯ ಜನ ಅದರಲ್ಲಿಯೂ ಯುವ ಸಮುದಾಯ ಟ್ವಿಟರ್ ಅಭಿಯಾನ, ಅಣಕು ಪ್ರದರ್ಶನ, ಪ್ರತಿಭಟನೆ ಸೇರಿದಂತೆ ತೀವ್ರತರವಾಗಿ ಭಿನ್ನ ವಿಭಿನ್ನವಾಗಿ ಹೋರಾಟ ನಡೆಸಿದ್ದರು.

ಅಲ್ಲದೆ 2019ರಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಗಮನ ಸೆಳೆಯುವ ನಿಟ್ಟಿನಲ್ಲಿ ಟ್ವಿಟರ್ ಅಭಿಯಾನ ನಡೆಸಲಾಗಿತ್ತು. ಅಲ್ಲದೇ ಈ ಅಭಿಯಾನ ಟ್ರೆಂಡ್ ಆದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಜನ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅದೇ ದಿನ ಸಂಜೆ ಪ್ರಕಟಿಸಿದ್ದರು.

ಆಸ್ಪತ್ರೆ ನಿರ್ಮಾಣಕ್ಕೆ ಸಲ್ಲಿಕೆಯಾಗದ ಪ್ರಸ್ತಾವನೆ: ಆದರೆ‌, ಇದಾಗಿ ಮೂರುವರೆ ವರ್ಷ ಕಳೆದಿದ್ದು ಈವರೆಗೂ ಆರೋಗ್ಯ ಅಧಿಕಾರಿಗಳ ವರದಿ ಮುಖ್ಯಮಂತ್ರಿ ಸಚಿವಾಲಯವನ್ನು ತಲುಪದಿರುವ ಸತ್ಯವೊಂದು ಬಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ವರದಿಯ ಪ್ರತಿ ಕೋರಿ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿಯೊಂದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈ ಬಗ್ಗೆ ಆರೋಗ್ಯಾಧಿಕಾರಿಗಳಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಉತ್ತರಿಸಿದೆ.

ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಹೋರಾಟಗಾರ ಭಾಸ್ಕರ್ ಪಟಗಾರ ಅವರು ಮಾತನಾಡಿದರು

ಈ ವಿಷಯ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಜನರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಆಸ್ಪತ್ರೆ ನಿರ್ಮಿಸುವ ಭರವಸೆ ನೀಡಿದ್ದು, ಅದಕ್ಕೆ ಪೂರಕವಾಗಿ ಪ್ರಸ್ತಾವನೆ ಸಲ್ಲಿಸದಿರೋದು ಇದೀಗ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ಹೋರಾಟಗಾರರಿಂದ ಎಚ್ಚರಿಕೆ: ಇನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿ ಹಿಂಪಡೆಯುವಂತೆ ಅರ್ಜಿದಾರರಿಗೆ ಒತ್ತಡ ಕೂಡ ಹೇರಿದ್ದು, ಅವಧಿ ಮುಗಿದರೂ ಮಾಹಿತಿ ನೀಡಿರಲಿಲ್ಲ. ಇದೀಗ ಹಳೆಯ ದಿನಾಂಕದೊಂದಿಗೆ ಇಮೇಲ್ ಮೂಲಕ ವರದಿ ಸಲ್ಲಿಕೆಯಾಗಿಲ್ಲ ಎಂಬ ಉತ್ತರ ನೀಡಲಾಗಿದೆ.

ಜನರ ಹೋರಾಟದ ದಿಕ್ಕು ತಪ್ಪಿಸುವ ಉದ್ದೇಶದಿಂದ ಇಂತಹ ಹುನ್ನಾರ ನಡೆಸಲಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಸರ್ಕಾರ ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡುತ್ತಿದೆ. ಇದು ಮುಂದುವರಿದಲ್ಲಿ ಜನರು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಇನ್ನು ಈ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಬಳಿ ಕೇಳಿದರೆ ಪ್ರಸ್ತುತ ಗುರುತು ಮಾಡಿದ ಜಾಗ ಅರಣ್ಯ ಇಲಾಖೆ ಹೆಸರಿನಲ್ಲಿರುವ ಕಾರಣ ಅದನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಇದರಿಂದ ತಡವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಳಿಯೂ ಚರ್ಚೆ ನಡೆಸಿದ್ದು, ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಕೂಡ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮತ್ತೆ ಪುನರ್ ಉಚ್ಚರಿಸಿದ್ದಾರೆ.

ಜನ ಅಸಮಾಧಾನ:ಒಟ್ಟಾರೆ ಜನ ಬೀದಿಗಿಳಿದು ಹೋರಾಟ ನಡೆಸುವ ಹೊತ್ತಿಗೆ ಭರವಸೆ ನೀಡಿ ಹೋರಾಟದ ದಿಕ್ಕು ತಪ್ಪಿಸಿದ್ದ ಜನಪ್ರತಿನಿಧಿಗಳು ಇದೀಗ ಮೌನವಹಿಸಿದ್ದಾರೆ. ಆದರೆ, ಆಸ್ಪತ್ರೆಗಾಗಿ ಪ್ರಸ್ತಾವನೆ ಸಲ್ಲಿಕೆಯಾಗದಿರುವ ಸತ್ಯ ಬಯಲಾಗಿದ್ದು ಜನ ಕೂಡ ಅಸಮಾಧಾನಗೊಂಡಿದ್ದು ಮುಂದೇನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಓದಿ:ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಕುಮಟಾದಲ್ಲಿ ಬೃಹತ್ ಪಾದಯಾತ್ರೆ

ABOUT THE AUTHOR

...view details