ಕರ್ನಾಟಕ

karnataka

ETV Bharat / state

ಗುಜರಾತ್​ ದುರ್ಘಟನೆ ಆದ್ರೂ ಬುದ್ಧಿ ಕಲಿಯದ ಜನ.. ಯಲ್ಲಾಪುರದಲ್ಲಿ ತೂಗು ಸೇತುವೆ ಮೇಲೆ ಕಾರು ಓಡಿಸಿ ಉದ್ಧಟತನ

ಗುಜರಾತ್​ ಬ್ರಿಡ್ಜ್​ ದುರಂತ ಸಂಭವಿಸಿ ನೂರಾರು ಜನರು ಸಾವನ್ನಪ್ಪಿರುವ ಪ್ರಕರಣ ಹಸಿಯಾಗಿರುವಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವರು ಉದ್ಧಟತನ ಮೆರೆದಿದ್ದಾರೆ. ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಅನುಚಿತವಾಗಿ ವರ್ತಿಸಿದ್ದಾರೆ.

By

Published : Nov 1, 2022, 1:07 PM IST

Updated : Nov 1, 2022, 3:16 PM IST

tourists runs car over flyover
ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ದರ್ಪ ಮೆರೆದ

ಶಿರಸಿ(ಉತ್ತರ ಕನ್ನಡ): ಗುಜರಾತ್​ನ ಮೊರ್ಬಿಯಲ್ಲಿ ಸೇತುವೆ ಕುಸಿದು ನೂರಾರು ಜನರು ಜಲಸಮಾಧಿ ಆಗಿದ್ದಾರೆ. ಮೃತದೇಹಗಳ ಪತ್ತೆ ಕಾರ್ಯ, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಇತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ ತೂಗು ಸೇತುವೆ ಮೇಲೆ ಕೆಲ ಪ್ರವಾಸಿಗರು ಕಾರು ಚಲಾಯಿಸಿ ಉದ್ಧಟತನ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಗುಜರಾತ್​ ತೂಗು ಸೇತುವೆ ದುರಂತ ಹಸಿಯಾಗಿರುವಾಗಲೇ ಜಿಲ್ಲೆಯಲ್ಲಿ ಪುಂಡರ ತಂಡವೊಂದು ತೂಗು ಸೇತುವೆಯ ಮೇಲೆ ಕಾರು ಚಲಾಯಿಸಿ ಜನರ ಪ್ರಾಣಕ್ಕೆ ಸಂಚಕಾರ ತಂದ ಘಟನೆ ಜರುಗಿದೆ. ಜಿಲ್ಲೆಯ ಯಲ್ಲಾಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರವಾಸಿಗರು ದೂರಿದ್ದಾರೆ.

ಸೇತುವೆಯಲ್ಲಿ ಸಾಗಿ ಬಂದ ಕಾರನ್ನು ಸ್ಥಳೀಯರು ತಡೆದು, ಬಂದ ದಾರಿಗೆ ಹಿಂದಕ್ಕೆ (ರಿವರ್ಸ್ ಗೇರ್‌ನಲ್ಲಿ) ಕಳುಹಿಸಿದ್ದಾರೆ. ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು ನೂರಾರು ಜನ ಮೃತಪಟ್ಟ ದುರ್ಘಟನೆ ಸಂಭವಿಸಿದ್ದರೂ ಕೆಲವರು ಎಚ್ಚೆತ್ತುಕೊಂಡಿಲ್ಲ. ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದಾರೆ.

ಫ್ಲೈಓವರ್​ ಮೇಲೆ ಕಾರು ಚಲಾಯಿಸಿ ದರ್ಪ.. ಸ್ಥಳೀಯರಿಂದ ಆಕ್ರೋಶ

ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗು ಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯ ಇರುವ ಕಾರಣ ಇದು ಪ್ರವಾಸಿ ತಾಣವಾಗಿಯೂ ಮಾರ್ಪಟ್ಟಿದೆ. ಹಲವು ಗ್ರಾಮಸ್ಥರಿಗೆ ಇದು ದೈನಂದಿನ ಜೀವನದ ಅಗತ್ಯ ಸೌಕರ್ಯವಾಗಿದೆ.

ಪ್ರವಾಸಕ್ಕೆ ಬಂದ ಕೆಲವರು ಸೇತುವೆಯ ಮೇಲೆ ಇಕ್ಕಟ್ಟಾದ ಜಾಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಾರೆ. ಕಾರು ಬಂದಾಗ ಸೇತುವೆಯಲ್ಲಿ ನಡೆದುಕೊಂಡು ಹೋಗಲು ಕೂಡ ಜಾಗವಿರುವುದಿಲ್ಲ. ಇದೊಂದು ದುಸ್ಸಾಹಸ, ಕಾರನ್ನು ಅದರಲ್ಲಿ ತರಬೇಡಿ ಎಂದು ಗ್ರ‌ಾಮದ ಹಿರಿಯರು ಕಿವಿಮಾತು ಹೇಳಿದರೂ ಧಿಕ್ಕರಿಸುತ್ತಿದ್ದಾರೆ. ಅಂಥವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸೇತುವೆಗೆ ಅಪಾಯವಾಗದಂತೆ ಕಾಪಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ.. ಗುಜರಾತ್​ ತೂಗು ಸೇತುವೆ ದುರಂತ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

Last Updated : Nov 1, 2022, 3:16 PM IST

ABOUT THE AUTHOR

...view details