ಕಾರವಾರ : ಭಾರತ ಸ್ವಾತಂತ್ರ್ಯ ಹೊಂದಿ 75 ವರ್ಷ ಕಳೆದರೂ ಇನ್ನೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳು ಬಹಳಷ್ಟಿವೆ ಎಂದರೆ ಅಚ್ಚರಿಯಾಗದೇ ಇರೋದಿಲ್ಲ. ಹೀಗೆ ರಸ್ತೆ ಸಮಸ್ಯೆಯಿದ್ದ ಗ್ರಾಮವೊಂದರಿಂದ ಗಾಯಾಳುವನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಹಳ್ಳಗಳಿಂದ ಜಲದಿಗ್ಭಂದನಕ್ಕೊಳಗಾಗಿದ್ದ ಗ್ರಾಮದಿಂದ ಸುಮಾರು 15 ಕಿ.ಮೀ ದೂರ ಹರಸಾಹಸಪಟ್ಟು, ಹಳ್ಳ ದಾಟಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗಿ ಗ್ರಾಮದ ಉಮೇಶ್ ಗೌಡ ಎಂಬುವರು ಕೃಷಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕತ್ತಿ ಜಾರಿದ ಪರಿಣಾಮ ಕಾಲಿಗೆ ಗಂಭೀರವಾಗಿ ಗಾಯವಾಗಿತ್ತು. ಆದರೆ, ಭಾರಿ ಮಳೆಯಿಂದಾಗಿ ಗ್ರಾಮದ ಬಳಿ ಹರಿಯುವ ನಾಲ್ಕು ಹಳ್ಳಗಳಿಂದಾಗಿ ಜಲದಿಗ್ಭಂದನ ಉಂಟಾಗಿದ್ದು, ಆಸ್ಪತ್ರೆಗೆ ತೆರಳಲಾಗದೇ ಮನೆಯಲ್ಲಿಯೇ ಉಳಿದುಕೊಳ್ಳುವಂತಾಗಿತ್ತು. ಕಳೆದ ನಾಲ್ಕೈದು ದಿನಗಳ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಗ್ರಾಮಸ್ಥರು ಒಟ್ಟಾಗಿ ಜೋಳಿಗೆ ಮೂಲಕ ಗಾಯಗೊಂಡಿದ್ದ ಉಮೇಶ್ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು, ಸುಮಾರು 15 ಕಿ.ಮೀ ದೂರ ಕಾಡಿನ ಹಾದಿಯಲ್ಲಿ ನಡೆದುಕೊಂಡೇ ಕರೆತಂದಿದ್ದಾರೆ. ಬಳಿಕ, ಹಟ್ಟಿಕೇರಿ ಗ್ರಾಮದಿಂದ ವಾಹನದ ಮೂಲಕ ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಸೂಕ್ತ ರಸ್ತೆಯಿಲ್ಲದ ಪರಿಣಾಮ ಗಾಯಗೊಂಡು ವಾರದ ಬಳಿಕ ಆಸ್ಪತ್ರೆಗೆ ಸೇರುವಂತಾಗಿದೆ.
ಇದನ್ನೂ ಓದಿ :ಹಿಮಾಚಲದಲ್ಲಿ ಮಳೆಯಿಂದ ರಸ್ತೆ ಹಾನಿ : 5 ಕಿಮೀ ಟ್ರಾಫಿಕ್ ಜಾಮ್ - ವಿಡಿಯೋ