ವಿಜಯಪುರ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನೊಬ್ಬನನ್ನು ಸವರ್ಣೀಯರು ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ-ವಿರುದ್ಧ ಪ್ರಕರಣ ದಾಖಲಾಗಿವೆ. ಈ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಜಿಲ್ಲಾ ಎಸ್ಪಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ದಲಿತ ಯುವಕನ ಹಲ್ಲೆ ಪ್ರಕರಣ.. ಪರ-ವಿರುದ್ಧ ದೂರು ದಾಖಲು
ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ ಎಂದು ಹಲ್ಲೆಗೊಳಗಾದ ಯುವಕನ ತಂದೆ ಯಂಕಪ್ಪ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ಪ್ರಕಾರ 13 ಜನರ ವಿರುದ್ಧ ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣ ದಾಖಲಿಸಲಾಗಿದೆ..
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ದಲಿತ ಯುವಕ ಕಾಶಿನಾಥ್ ತಳವಾರ ಎಂಬುವನನ್ನು ಸವರ್ಣೀಯರು ಮನ ಬಂದಂತೆ ಥಳಿಸಿದ್ದಾರೆ. ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ ಎಂದು ಹಲ್ಲೆಗೊಳಗಾದ ಯುವಕನ ತಂದೆ ಯಂಕಪ್ಪ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ಪ್ರಕಾರ 13 ಜನರ ವಿರುದ್ಧ ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲಾಗಿದೆ ಎಂದರು.
ಹಲ್ಲೆಗೊಳಗಾದ ಯುವಕ ಕಾಶಿನಾಥ್ ತಳವಾರ ಹೆಣ್ಣು ಮಕ್ಕಳು ಬಟ್ಟೆ ಒಗೆಯುವಾಗ ಅವರನ್ನು ಚುಡಾಯಿಸುತ್ತಿದ್ದನು ಎಂದು ಸವರ್ಣೀಯರು ಸಹ ಪ್ರತಿ ದೂರು ನೀಡಿದ್ದಾರೆ. ಈ ಸಂಬಂಧ ದಲಿತ ಯುವಕ ಕಾಶಿನಾಥ್ ವಿರುದ್ಧ ಯುವತಿಯೊಬ್ಬಳು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಎರಡು ಕೋನದಲ್ಲಿ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.