ವಿಜಯಪುರ:ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಂತ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನು ಕೆಲವು ಆಸ್ಪತ್ರೆಗಳು ತೆರೆಯದಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ತಕ್ಷಣ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆಯಾದ್ಯಂತ ಇರುವಂತಹ 229 ಆರ್ಯುವೇದಿಕ್ ಕ್ಲೀನಿಕ್/ ನರ್ಸಿಂಗ್, 5 ಯುನಾನಿ, 29 ಹೋಮಿಯೋಪಥಿಕ್, 230 ಆಲೋಪಥಿಕ್ ಮತ್ತು 38 ಡೈಗ್ನೋಸ್ಟಿಕ್ ಆಸ್ಪತ್ರೆಗಳು ಯಾವುದೇ ಪರಿಸ್ಥಿತಿಯಲ್ಲಿ ಉಸಿರಾಟ ತೊಂದರೆ, ನೆಗಡಿ, ಕೆಮ್ಮು, ಜ್ವರ (ಐಎಲ್ಐ) ರೋಗಿಗಳನ್ನು ಉಪಚರಿಸುವಂತಿಲ್ಲ. ಇಂತಹ ರೋಗಿಗಳು ಕಂಡುಬಂದಲ್ಲಿ ತಕ್ಷಣ ತಜ್ಞವೈದ್ಯರ ಬಳಿಗೆ ಕಳುಹಿಸುವುದರ ಜೊತೆಗೆ ರೋಗಿ, ಸಂಬಂಧಿಸಿದ ಆಸ್ಪತ್ರೆಗೆ ತಲುಪಿದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಈ ಕುರಿತು ಆಯಾ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಐಎಂಎ ಅಧ್ಯಕ್ಷರಿಗೂ ಮಾಹಿತಿ ಒದಗಿಸಬೇಕು. ಅಲ್ಲದೇ ರೋಗಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಟ್ಟುಕೊಂಡಿರಬೇಕು ಎಂದು ಅವರು ತಿಳಿಸಿದ್ದಾರೆ.