ವಿಜಯಪುರ: ಜನವರಿ 12ರಿಂದ 18ರವರೆಗೆ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ ಎಂದು ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ ತಿಳಿಸಿದರು.
ಜ.12ರಿಂದ ಸಿದ್ಧೇಶ್ವರ ಸಂಕ್ರಮಣ ಜಾತ್ರೆ: 9 ದಿನಗಳ ಮಹೋತ್ಸವಕ್ಕೆ ಭರ್ಜರಿ ತಯಾರಿ - On january 12th Siddeshwara Sankramana Fair starts in Vijayapura
ಜನವರಿ 12ರಿಂದ 18ರವರೆಗೆ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ ಎಂದು ಸಿದ್ಧೇಶ್ವರ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ ತಿಳಿಸಿದರು.
![ಜ.12ರಿಂದ ಸಿದ್ಧೇಶ್ವರ ಸಂಕ್ರಮಣ ಜಾತ್ರೆ: 9 ದಿನಗಳ ಮಹೋತ್ಸವಕ್ಕೆ ಭರ್ಜರಿ ತಯಾರಿ Vijayapura](https://etvbharatimages.akamaized.net/etvbharat/prod-images/768-512-5652057-thumbnail-3x2-mng.jpg)
ನಗರದ ಸಿದ್ಧೇಶ್ವರ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳ ಭಕ್ತರು ಜಾತ್ರೆಗೆ ಆಗಮಿಸಲಿದ್ದಾರೆ. ಜ.12ರಂದು ನಂದಿ ಧ್ವಜ, ಗೋಮಾತಾ ಮೆರವಣಿಗೆ ನಡೆಲಿದೆ. ಜ.13ರಂದು ನಂದಿ ಧ್ವಜ ಉತ್ಸವ ನಡೆಯಲಿದ್ದು, ರಾತ್ರಿ 8 ಗಂಟೆಗೆ ಭಜನಾ ಕಾರ್ಯಕ್ರಮ ನಡೆಸಲಾಗುತ್ತದೆ. ಜ.14ರಂದು ಅಕ್ಷತಾ ಭೋಗಿ ಕಾರ್ಯಕ್ರಮ ಹಾಗೂ ರಾತ್ರಿ 8 ಗಂಟೆಗೆ ಮನರಂಜನಾ ಕಾರ್ಯಕ್ರಮವನ್ನು ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜ.15ರಂದು ಹೋಮ ಹವನ ಪಲ್ಲಕಿ ಉತ್ಸವವನ್ನು ನಡೆಸಲಾಗುತ್ತದೆ. ಜ.16ರಂದು ಸಿಡಿಮದ್ದು ಪ್ರದರ್ಶನ ನಡೆಸಲಾಗುವುದು. ಜ.17 ರಂದು ಯುವಕರಿಗಾಗಿ ಭಾರ ಎತ್ತು ಸ್ಪರ್ಧೆ, ಜ. 18ರಂದು ಜಂಗೀ ಕುಸ್ತಿ ನಗರದ ಎಸ್ಎಸ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರಾಷ್ಟ್ರೀಯ ಕುಸ್ತಿಪಟುಗಳು ಪಾಲ್ಗೊಳ್ಳುತ್ತಾರೆ ಎಂದರು.
ಬಳಿಕ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಜಾತ್ರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ 7 ದಿನಗಳ ಕಾಲ ಜಾನುವಾರು ಜಾತ್ರೆ ನಡೆಯುತ್ತವೆ. ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ ಜಾನುವಾರುಗಳು ಬರುತ್ತವೆ. ಪ್ರದರ್ಶನದಲ್ಲಿ ವಿಜೇತ ಜಾನುವಾರುಗಳಿಗೆ ಬಹುಮಾನ ನೀಡಲಾಗುತ್ತದೆ. ಜಾನುವಾರ ಜಾತ್ರೆಯನ್ನು ನಗರದ ಹೊರವಲಯದಲ್ಲಿರುವ ತೋರವಿ ಗ್ರಾಮದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.