ವಿಜಯಪುರ :ಎಲ್ಲೆಡೆ ಹರಡುತ್ತಿರುವ ಕೋವಿಡ್-19 ತಡೆಗೆ ಅವಶ್ಯಕ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕಂಟೇನ್ಮೆಂಟ್ ವಲಯಗಳಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ತಹಶೀಲ್ದಾರರು ಮತ್ತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಡಿಸಿ ಸಭೆ ನಡೆಸಿದರು. ವೇಳೆ ಮಾತನಾಡಿದ ಡಿಸಿ, ಸಾಂಕ್ರಾಮಿಕವಾಗಿ ಹರಡುತ್ತಿರುವ ಕೋವಿಡ್-19 ತಡೆಗೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ಧರು, 10 ವರ್ಷದೊಳಗಿನ ಮಕ್ಕಳು ಯಾವುದೇ ಪರಿಸ್ಥಿತಿಯಲ್ಲೂ ಹೊರಗೆ ಬರದಂತೆ ಮುನ್ನೆಚ್ಚರಿಕಾ ಕ್ರಮವಹಿಸಲು ಮನವಿ ಮಾಡಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯ ಪ್ರಾಥಮಿಕ ಲಕ್ಷಣಗಳು ಕಂಡು ಬಂದ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಯಾವುದೇ ಆಸ್ಪತ್ರೆಗಳಿಗೆ ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮಳೆಗಾಲ ಇರುವುದರಿಂದ ನೆಗಡಿ, ಕೆಮ್ಮು, ಜ್ವರ ಮತ್ತು ಉಸಿರಾಟ ತೊಂದರೆಗಳು ಕಂಡು ಬಂದಲ್ಲಿ ಆಸ್ಪತ್ರೆಗೆ ದಾಖಲಾಗಬೇಕು. ತೀವ್ರ ಉಸಿರಾಟ ತೊಂದರೆ ಆಗುವವರೆಗೆ ವಿಳಂಬ ಮಾಡದೇ ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ಸಂಪರ್ಕಿಸುವಂತೆ ತಿಳಿಸಿದರು.