ವಿಜಯಪುರ: ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಆ. 20 ರಂದು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ತಿಳಿಸಿದರು.
ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದೆಂದ ರಾಜು ಆಲಗೂರ ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರನ್ನು ತುಳಿದು ಕಾರ್ಪೋರೇಟ್ ಕಂಪನಿ ಬೆಳೆಸುವ ಹುನ್ನಾರ ನಡೆಸಿ ಭೂ ಸುಧಾರಣೆ, ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ರೈತರಿಗೆ ಮೋಸ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ನಿನ್ನೆ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಬಿ.ಆರ್. ಅಂಬೇಡ್ಕರ್ ಅವರ ಹೆಸರು ಸ್ಮರಿಸದಿರೋದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂವಿಧಾನದ ಮೂಲಕವೇ ಆಡಳಿತಕ್ಕೆ ಬಂದ ಸಚಿವೆ ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಲಸೆ ಕಾರ್ಮಿಕರ ಒಂದು ಊಟಕ್ಕೆ ಸರ್ಕಾರ 1,200 ರೂ. ಬಿಲ್ ಪಾವತಿಸಿ ಅಲ್ಲೂ ಭ್ರಷ್ಟಾಚಾರ ನಡೆಸಿದೆ. ಅಲ್ಲದೆ ಕೊರೊನಾ ನಿಯಂತ್ರಣ ಮಾಡುವುದು ಸರ್ಕಾರಕ್ಕೆ ಆಗುವುದಿಲ್ಲ ಎಂದು ಆರೋಗ್ಯ ಸಚಿವರೇ ಕೈ ಚೆಲ್ಲಿದ್ದಾರೆ. ಸರ್ಕಾರ ಎಷ್ಟು ಕಾರ್ಯ ಪ್ರವೃತ್ತವಾಗಿದೆ ಎಂದು ಅದರಲ್ಲೇ ಗೊತ್ತಾಗುತ್ತೆ ಎಂದು ಕಿಡಿಕಾರಿದರು.