ವಿಜಯಪುರ: ಮೊಬೈಲ್ ಕಳ್ಳತನ ಮಾಡಿ ಜೈಲು ಸೇರಿದ್ದ ಆರೋಪಿಗೆ ಹೊಟ್ಟೆ ನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ನಿಡಗುಂದಿ ತಾಲೂಕಿನ ಆಲಮಟ್ಟಿಯ ನಿವಾಸಿ ಬಸವರಾಜ್ ಸಂಜೀವಪ್ಪ ತಳವಾರ ಕಳೆದೊಂದು ವಾರದ ಹಿಂದೆ ಮೊಬೈಲ್ ಕದ್ದು ದರ್ಗಾ ಜೈಲು ಸೇರಿದ್ದ. ಎರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಮೃತ ವ್ಯಕ್ತಿಯ ಮೇಲೆ ಈ ಹಿಂದೆ ಯಾವುದಾದರೂ ಪ್ರಕರಣಗಳಿದ್ವಾ? ಎಂಬುದನ್ನು ತನಿಖೆ ನಡೆಸಿ, ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ಕುಟುಂಬಸ್ಥರು ಹಾಗೂ ಎಸ್ಪಿ ಪ್ರತಿಕ್ರಿಯೆ ಬಸವರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸಹೋದರ ಹಣಮಂತ ತಳವಾರ, "ನಮ್ಮ ಅಣ್ಣ ಈ ರೀತಿ ಮೃತಪಟ್ಟಿರೋದು ಸಂಶಯ ಮೂಡಿಸಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದ ಮೇಲೆ ಬರುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಗತ್ಯ ಬಿದ್ದರೆ ಹೋರಾಟ ನಡೆಸುತ್ತೇವೆ" ಎಂದರು.