ವಿಜಯಪುರ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದಡಿಯಲ್ಲಿನ 28 ಜನ ಸಂತ್ರಸ್ತರಿಗೆ 13.12 ಲಕ್ಷ ಪರಿಹಾರ ಧನ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ 1989ರಡಿಯಲ್ಲಿ 2019ರ ಜನವರಿ 1 ರಿಂದ ಮೇ-31 ರವರೆಗೆ ಒಟ್ಟು 28 ಪ್ರಕರಣಗಳು ದಾಖಲಾಗಿದ್ದು, ಇದಕ್ಕಾಗಿ 2018-9 ನೇ ಸಾಲಿನಲ್ಲಿ 57.32 ಲಕ್ಷ ಹಾಗೂ 2019-20ನೇ ಸಾಲಿನಲ್ಲಿ 20 ಲಕ್ಷ ಸೇರಿದಂತೆ ಒಟ್ಟು 77.32 ಲಕ್ಷ ಅನುದಾನ ಬಿಡುಗಡೆಯಾಗಿದೆ.
ಈ ಪೈಕಿ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಎಸ್ಸಿ, ಎಸ್ಟಿ ಜನಾಂಗದ ಒಟ್ಟು 16 ಸಂತ್ರಸ್ಥರಿಗೆ 13.12 ಲಕ್ಷ ಪರಿಹಾರ ಧನ ವಿತರಿಸಲಾಗಿದೆ. ಉಳಿದ 12 ಪ್ರಕರಣಗಳಲ್ಲಿ ಪರಿಹಾರ ಧನ ನೀಡಲು ಅಗತ್ಯ ದಾಖಲೆಗಳನ್ನು ಪಡೆದು ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಜಯಪುರ ಮತ್ತು ತಿಕೋಟಾ ತಾಲೂಕಿನಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ದಲಿತ ಕಾಲೋನಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅದರಂತೆ ಬಬಲೇಶ್ವರ ತಾಲೂಕಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇಲ್ಲ ಎಂದು ಹೇಳಿದರು.
ತೊರವಿ ಗ್ರಾಮದ ಶಾಲೆಗಳಿಗೆ ನೀರು ಪೂರೈಸಲಾಗುತ್ತಿದೆ. ಆದರೆ ದಲಿತ ಕಾಲೋನಿಗಳಲ್ಲಿ ನೀರಿನ ಸಂಪರ್ಕ ಕಡಿತಗೊಂಡಿದ್ದು, ಈ ಕುರಿತು ದುರಸ್ಥಿಗೆ ಕ್ರಮಕೈಗೊಳ್ಳಬೇಕು. 170ರಲ್ಲಿ 50 ಬೊರ್ವೆಲ್ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಬೊರ್ವೆಲ್ಗಳನ್ನು ದುರಸ್ಥಿಗೊಳಿಸಿ ಪಂಚಾಯತಿ ವ್ಯಾಪ್ತಿಯ ಬೊರ್ವೆಲ್ಗಳನ್ನು ವೈಯಕ್ತಿಕ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮಕ್ಕಳ ಪ್ರವೇಶಕ್ಕೆ ಕ್ರಮವಹಿಸಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ಯಾವೊಬ್ಬ ರೈತರು ಈ ಯೋಜನೆಯಿಂದ ವಂಚಿತವಾಗದಂತೆ ಜಿಲ್ಲೆಯ ಎಲ್ಲ ರೈತರು ಈ ಯೋಜನೆಯಡಿ ಲಾಭ ಪಡೆದುಕೊಳ್ಳಲು ಕ್ರಮಕೈಗಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ದಲಿತ ಕಾಲೋನಿಗಳಲ್ಲಿ 4 ಬೊರವೆಲ್ಗಳಿದ್ದರೂ ಇವು ಚಾಲ್ತಿಯಲ್ಲಿಲ್ಲ. ಈ ಕುರಿತಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಬರಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕ್ ಅವರು ಸೂಚನೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ನೀಡುವ ಮನೆಗಳಿಗೆ ಸಕಾಲದಲ್ಲಿ ಜಿಪಿಎಸ್ ಅಳವಡಿಸಬೇಕು. ಸಂಬಂಧಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಬಸವನಬಾಗೇವಾಡಿ ತಾಲೂಕಿನ ಸಾಸನೂರ ಗ್ರಾಮದ ಬಸ್ ನಿಲ್ದಾಣ ಹತ್ತಿರದ ಶುದ್ಧ ಕುಡಿಯುವ ನೀರಿನ ಘಟಕವಿದೆ. ಆದರೂ ದಲಿತ ಕಾಲೋನಿಯಲ್ಲಿ ಪ್ರತ್ಯೇಕವಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಜನಸಂಖ್ಯೆಯಾಧಾರದ ಮೇಲೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೂಚಿಸಿದರು.
ಬಸವನಬಾಗೇವಾಡಿ ತಾಲೂಕಿನ ಹಾಲಿಹಾಳ ಗ್ರಾಮದ ಆಶ್ರಯ ಮನೆಗಳಿಗೆ ರಸ್ತೆ ನಿರ್ಮಾಣಕ್ಕೆ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ಖರೀದಿಗೆ ಕ್ರಿಯಾಯೋಜನೆ ಸಿದ್ದಪಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಹಸೀಲ್ದಾರರಿಗೆ ಸೂಚಿಸಲಾಯಿತು.
ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕುಗಳಲ್ಲಿ ಪೋಲಿಸ್ ಇಲಾಖೆಯಿಂದ ಕುಂದು-ಕೊರತೆ ಸಭೆಗಳನ್ನು ನಿಗದಿತ ದಿನಾಂಕಗಳಲ್ಲಿ ನಡೆಸದಿರುವ ಕುರಿತು ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾದ ಈ ಕುರಿತಂತೆ 15 ದಿನಗಳಲ್ಲಿ ಸಮಸ್ಯೆ ಬಗೆಹರಿಸಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಂದು-ಕೊರತೆ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಸಮಿತಿಯ ವಿವಿಧ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.