ಕರ್ನಾಟಕ

karnataka

ಸರಳ ರೀತಿಯಲ್ಲಿ, ಭಕ್ತಿ ಪೂರ್ವಕವಾಗಿ ಹಬ್ಬ ಆಚರಿಸಿ: ಡಿಸಿ ಎಂ. ಕೂರ್ಮಾ ರಾವ್

ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ, ಭಕ್ತಿ ಪೂರ್ವಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ತಿಳಿಸಿದ್ದಾರೆ.

By

Published : Aug 21, 2020, 12:07 AM IST

Published : Aug 21, 2020, 12:07 AM IST

DC M kurma rao
DC M kurma rao

ಯಾದಗಿರಿ: ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ, ಭಕ್ತಿ ಪೂರ್ವಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ತಿಳಿಸಿದ್ದಾರೆ.

ಮಾರ್ಗಸೂಚಿಯನ್ವಯ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿ ಪೂರ್ವಕವಾಗಿ ದೇವಸ್ಥಾನ, ಮನೆ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಜನಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಗಳನ್ನು ನಾಲ್ಕು ಅಡಿ ಎತ್ತರ ಹಾಗೂ ಮನೆಗಳಲ್ಲಿ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು.

ಗಣೇಶೋತ್ಸವ ಸಮಿತಿಗಳು, ಗಣೇಶ ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಪೊಲೀಸ್ ಇಲಾಖೆ, ಜೆಸ್ಕಾಂ, ಮುನ್ಸಿಪಲ್ ಕಾರ್ಪೋರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡ್ ಗೆ, ಗ್ರಾಮಕ್ಕೆ ಒಂದು ಗಣೇಶ ಮೂರ್ತಿಯನ್ನು ಮಾತ್ರ ಪ್ರತಿಷ್ಠಾಪಿಸಿ ಸರಳ ಆಚರಣೆಗೆ ಪ್ರೋತ್ಸಾಹಿಸುವುದು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚು ಜನರು ಸೇರದಂತೆ ನೋಡಿಕೊಳ್ಳುವುದು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಇರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿರ್ಸಜಿಸುವಾಗ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಜೇಷನ್ ಮಾಡುವುದು ಹಾಗೂ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಭಕ್ತರು ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details