ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರೊಟೆಸ್ಟ್: ರಾಷ್ಟ್ರಪತಿ ಭೇಟಿಯಾದ ಸೋನಿಯಾ ಗಾಂಧಿ ನಿಯೋಗ!
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ವಿಪಕ್ಷಗಳು ಸಹ ಇದರಲ್ಲಿ ಭಾಗಿಯಾಗಿ ರಾಷ್ಟ್ರಪತಿಗೆ ಈ ಮಸೂದೆ ಹಿಂಪಡೆದುಕೊಳ್ಳುವಂತೆ ಮನವಿ ಮಾಡಿವೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದು, ತದನಂತರ ಸೋನಿಯಾ ಗಾಂಧಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಜನರ ಧ್ವನಿ ಕೇಳಿಸುತ್ತಿಲ್ಲ. ತಕ್ಷಣವೇ ಈ ಮಸೂದೆ ಹಿಂಪಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ರು.