ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಪ್ರಾಥಮಿಕ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ - preliminary report
Published : Nov 28, 2023, 8:48 PM IST
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಕುರಿತು ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಪ್ರಾಥಮಿಕ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ರಾಜ್ಯದಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆ ಪ್ರಕರಣದ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಪ್ರಾಥಮಿಕ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತಾ ಆಸ್ಪತ್ರೆ ಕೆಪಿಎಮ್ಇ ರಿಜಿಸ್ಟರ್ ಆಗಿಲ್ಲ. ಅವರು ಟ್ರೇಡ್ ಲೈಸೆನ್ಸ್ ಕೂಡ ಪಡೆದಿಲ್ಲ. ಈ ಬಗ್ಗೆ ನಗರ ಪೊಲೀಸ್ ಕಮಿಷನರ್, ಡಿಎಚ್ಒ ಹಾಗೂ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ ಮಾಡಲಾಗುವುದು. ಇಲ್ಲಿಯವರೆಗೆ ಭ್ರೂಣ ಹತ್ಯೆ ನಡೆಸುತ್ತಿದ್ದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಹೀಗಾಗಿ ಇದು ಯಾರಿಗೂ ಗೊತ್ತಾಗಿಲ್ಲ. ಆಪರೇಷನ್ಗೆ ಒಳಗಾದ ಪೋಷಕರನ್ನು ಕರೆದು ಪೊಲೀಸರು ತನಿಖೆ ನಡೆಸಲಿದ್ದಾರೆ. ತಪ್ಪಿತಸ್ಥರೆಂದು ಕಂಡು ಬಂದರೆ ಶಿಕ್ಷೆ ಖಚಿತ ಎಂದರು.
ಈ ಪ್ರಕರಣದಿಂದ ಜಿಲ್ಲೆಯಲ್ಲಿರುವ ಎಲ್ಲ ಮೆಡಿಕಲ್ ಸ್ಟೋರ್, ಕ್ಲಿನಿಕ್ಗಳನ್ನು ಪರಿಶೀಲನೆ ಮಾಡಲಾಗುವುದು. ಪ್ರತಿಯೊಬ್ಬರು ತಮ್ಮ ಟ್ರೇಡ್ ನಂಬರ್, ವಿಶೇಷ ನಂಬರ್ಗಳನ್ನು ಡಿಸ್ ಪ್ಲೇ ಮಾಡಬೇಕು. ಇಲ್ಲಿಯವರೆಗೆ ಅನುಮತಿ ಇಲ್ಲದೇ ಯಾರಾದರೂ ಕ್ಲಿನಿಕ್ ಅಥವಾ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರೆ, ಅವರ ಟ್ರೇಡ್ ಲೈಸೆನ್ಸ್ ಅನ್ನು ರದ್ದು ಮಾಡಲಾಗುವುದು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ. ಕೆ ವಿ ರಾಜೇಂದ್ರ ಮಾಹಿತಿ ನೀಡಿದರು.
ಇದನ್ನೂ ಓದಿ: 900 ಭ್ರೂಣ ಹತ್ಯೆಗಳ ಬಗ್ಗೆ ಆರೋಗ್ಯ ಇಲಾಖೆ ಇರಲಿಲ್ಲವೇಕೆ ಮಾಹಿತಿ?: ದಿಶಾ ಸಭೆಯಲ್ಲಿ ಪ್ರತಾಪ್ ಸಿಂಹ ಪ್ರಶ್ನೆ