ಕರ್ನಾಟಕ

karnataka

ETV Bharat / bharat

ಸುಪ್ರಿಂ ಕೋರ್ಟ್​ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದ ಅಸ್ತು - appointment of Justices

ಸುಪ್ರೀಂ ಕೋರ್ಟ್​ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

By ETV Bharat Karnataka Team

Published : Jul 16, 2024, 3:52 PM IST

ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್​ (IANS)

ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸನ್ನು ತ್ವರಿತವಾಗಿ ಅಂಗೀಕರಿಸಿರುವ ಕೇಂದ್ರ ಸರ್ಕಾರ ಮಂಗಳವಾರ ನ್ಯಾಯಮೂರ್ತಿಗಳಾದ ಎನ್ ಕೋಟಿಶ್ವರ್ ಸಿಂಗ್ ಮತ್ತು ಆರ್ ಮಹಾದೇವನ್ ಅವರನ್ನು ಸುಪ್ರೀಂ ಕೋರ್ಟ್​​​ನ ​ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, "ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರೊಂದಿಗೆ ಸಮಾಲೋಚಿಸಿದ ನಂತರ ಇಬ್ಬರು ನ್ಯಾಯಾಧೀಶರನ್ನು ನೇಮಕ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ" ಎಂದು ಹೇಳಿದ್ದಾರೆ.

ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 11 ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಮತ್ತು ಮದ್ರಾಸ್ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನು ಸುಪ್ರೀಂ ಕೋರ್ಟ್​ಗೆ ಬಡ್ತಿ ನೀಡಲು ಶಿಫಾರಸು ಮಾಡಿದ ಐದು ದಿನಗಳಲ್ಲಿ ಕೇಂದ್ರ ಸರ್ಕಾರ ಈ ಹೆಸರುಗಳಿಗೆ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಸಿಂಗ್ ಮತ್ತು ಮಹಾದೇವನ್ ಅವರ ಪ್ರಮಾಣ ವಚನದ ನಂತರ, ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಸುಪ್ರೀಂ ಕೋರ್ಟ್​ನ ವೆಬ್​ಸೈಟ್​ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸುಪ್ರೀಂ ಕೋರ್ಟ್​ಗೆ ನ್ಯಾಯಮೂರ್ತಿಗಳ ನೇಮಕಾತಿಯ ಶಿಫಾರಸುಗಳ ಸಂದರ್ಭದಲ್ಲಿ ಹಿರಿತನ, ಅರ್ಹತೆ, ಸಮಗ್ರತೆ, ಪ್ರದೇಶ, ಲಿಂಗ ಮತ್ತು ಸಮುದಾಯದ ವೈವಿಧ್ಯತೆ ಮತ್ತು ಸಮಾಜದ ಅಂಚಿನಲ್ಲಿರುವ ಮತ್ತು ಹಿಂದುಳಿದ ವರ್ಗಗಳ ಸೇರ್ಪಡೆ ಮುಂತಾದ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಕೊಲಿಜಿಯಂ ಹೇಳಿದೆ.

ಮಣಿಪುರದವರಾದ ನ್ಯಾಯಮೂರ್ತಿ ಕೋಟಿಶ್ವರ್ ಸಿಂಗ್ ಅವರನ್ನು 2011ರ ಅಕ್ಟೋಬರ್ನಲ್ಲಿ ಗುವಾಹಟಿ ಹೈಕೋರ್ಟ್​ನ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.

ನ್ಯಾಯಮೂರ್ತಿ ಆರ್ ಮಹಾದೇವನ್ ಪ್ರಸ್ತುತ ಮದ್ರಾಸ್ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ ಮತ್ತು ಮದ್ರಾಸ್ ಹೈಕೋರ್ಟ್​ನಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಾಧೀಶರ ಹಿರಿತನದ ಶ್ರೇಣಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹಿಂದುಳಿದ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಸಲುವಾಗಿ ನ್ಯಾಯಮೂರ್ತಿ ಮಹಾದೇವನ್ ಅವರಿಗೆ ಆದ್ಯತೆ ನೀಡಲಾಗಿದೆ ಎಂದು ಕೊಲಿಜಿಯಂ ಹೇಳಿದೆ.

ಇದನ್ನೂ ಓದಿ : ಅಧಾರ್ಮಿಕ ಚಟುವಟಿಕೆ ಆರೋಪ: 13 ಮಹಾಮಂಡಲೇಶ್ವರರು, ಸಂತರನ್ನು ಹೊರಹಾಕಿದ ಅಖಾಡಾ ಪರಿಷತ್ - AKHARA PARISHAD

ABOUT THE AUTHOR

...view details