ಹೈದರಾಬಾದ್:'ಭಾರತ್ ಜೋಡೋ ನ್ಯಾಯ ಯಾತ್ರೆ'ಯ ವೇಳೆ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ರಾಜ್ಯದ ನಾಗಾವ್ನಲ್ಲಿರುವ ಶಂಕರದೇವ್ ಅವರ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿರುವುದನ್ನು ವಿರೋಧಿಸಿ ತೆಲಂಗಾಣ ಕಾಂಗ್ರೆಸ್ ಮುಖಂಡರು ಸೋಮವಾರ ಕ್ಯಾಂಡಲ್ ರ್ಯಾಲಿ ನಡೆಸಿದರು. ಐಟಿ ಸಚಿವ ಡಿ.ಶ್ರೀಧರ್ ಬಾಬು ರ್ಯಾಲಿಯ ನೇತೃತ್ವ ವಹಿಸಿದ್ದರು. ಬಾಬು ಜಗಜೀವನ್ ರಾಮ್ ಪ್ರತಿಮೆಯಿಂದ ಬಶೀರ್ಬಾಗ್ನಲ್ಲಿರುವ ಅಂಬೇಡ್ಕರ್ ಪ್ರತಿಮೆವರೆಗೆ ರ್ಯಾಲಿ ಸಾಗಿತು.
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿರುವ ಬಗ್ಗೆ ತೆಲಂಗಾಣ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ಯಾತ್ರೆಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದನ್ನು ಕಂಡು ಬಿಜೆಪಿ ಆತಂಕಕ್ಕೆ ಒಳಗಾಗಿದೆ. ಅದಕ್ಕಾಗಿಯೇ ಯಾತ್ರೆಯನ್ನು ತಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.
ರಾಹುಲ್ ಗಾಂಧಿ ಮೇಲಿನ ದಾಳಿಯನ್ನು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದೂ ಅವರು ಟೀಕಿಸಿದರು. ಈ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಪ್ರತಿಭಟನಾ ಕಾರ್ಯಕ್ರಮಕ್ಕೆ ಕರೆ ನೀಡಿದೆ ಎಂದು ಟಿಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಂಘಟನೆ ಉಸ್ತುವಾರಿ ಮಹೇಶ್ ಕುಮಾರ್ ಗೌಡ್ ತಿಳಿಸಿದ್ದಾರೆ.