ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಎರಡು ಚುನಾವಣೆಗಳಲ್ಲಿ ಒಂದೂ ಸ್ಥಾನ ಗೆಲ್ಲದ ಕಾಂಗ್ರೆಸ್ ಈ ಬಾರಿಯೂ ಮತ್ತೊಮ್ಮೆ ಅದೇ ಆಘಾತವನ್ನು ಅನುಭವಿಸಿದೆ. ಅಷ್ಟೇ ಅಲ್ಲ, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಭ್ಯರ್ಥಿಗಳು ತಮ್ಮ ಭದ್ರತಾ ಠೇವಣಿಯನ್ನು ಕಳೆದುಕೊಂಡಿರುವುದು ಕಾಂಗ್ರೆಸ್ನ ಹೀನಾಯ ಸೋಲಿಗೆ ಸಾಕ್ಷಿಯಾಗಿದೆ.
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಸ್ಪರ್ಧಿಗಳಲ್ಲಿ ಸುಮಾರು ಶೇ.80ರಷ್ಟು ಅಭ್ಯರ್ಥಿಗಳು ತಮ್ಮ ಠೇವಣಿಯನ್ನೂ ಉಳಿಸಿಕೊಳ್ಳಲು ಸಾಧ್ಯವಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಎಎಪಿ, ಬಿಜೆಪಿ ಹಾಗೂ ಮಿತ್ರ ಪಕ್ಷಗಳಾದ ಜನತಾ ದಳ(ಯುನೈಟೆಡ್) ಮತ್ತು ಎಲ್ಜೆಪಿ (ರಾಮ್ ವಿಲಾಸ್) ಪಕ್ಷಗಳ ಎಲ್ಲಾ ಅಭ್ಯರ್ಥಿಗಳು ಮಾತ್ರ ತಮ್ಮ ಭದ್ರತಾ ಠೇವಣಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 27 ವರ್ಷಗಳ ಬಳಿಕ ದೆಹಲಿಯ 70 ಕ್ಷೇತ್ರಗಳಲ್ಲಿ 48 ಕ್ಷೇತ್ರಗಳಲ್ಲಿ ಗೆದ್ದಿರುವ ಕೇಸರಿ ಪಕ್ಷ ಗದ್ದುಗೆ ಏರುವ ಸಿದ್ಧತೆಯಲ್ಲಿದೆ. ಆಡಳಿತರೂಢ ಆಪ್ ಮಾತ್ರ 22 ಸ್ಥಾನಗಳಿಗೆ ಕುಸಿದಿದೆ. ಮಾತ್ರವಲ್ಲ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಸೋಲು ಎಎಪಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.
ಫೆ. 5 ರಂದು ನಡೆದ ಚುನಾವಣೆಯಲ್ಲಿ ಕಣದಲ್ಲಿದ್ದ 699 ಅಭ್ಯರ್ಥಿಗಳ ಪೈಕಿ 555 ಅಂದರೆ ಶೇ. 79.39 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಸತತ ಮೂರನೇ ಬಾರಿಗೆ ಸಿಂಗಲ್ ಸೀಟ್ ಗೆಲ್ಲದೇ ಇರುವುದು ಮಾತ್ರವಲ್ಲದೆ ತನ್ನ 67 ಅಭ್ಯರ್ಥಿಗಳು ತಮ್ಮ ಭದ್ರತಾ ಠೇವಣಿಯನ್ನೂ ಕಳೆದುಕೊಂಡಿರುವುದು ಕಾಂಗ್ರೆಸ್ಗೆ ತೀವ್ರ ಆಘಾತವನ್ನುಂಟುಮಾಡಿದೆ.