ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಅವರನ್ನು ಜಾಲ್ನಾ ಜಿಲ್ಲೆಯಲ್ಲಿ ಪಕ್ಷದ ಯಾವುದೇ ಪದಾಧಿಕಾರಿ ಹುದ್ದೆಗೆ ನೇಮಕ ಮಾಡದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಿರ್ಬಂಧ ವಿಧಿಸಿದೆ. ಪಂಗರ್ಕರ್ ಶುಕ್ರವಾರ ಪಕ್ಷದ ಮುಖಂಡ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ. ನವೆಂಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಶಿವಸೇನೆ ಸೇರಿದ್ದು ಗಮನಾರ್ಹ.
ಮಾಜಿ ಶಿವಸೈನಿಕ ಪಂಗರ್ಕರ್ ಪಕ್ಷಕ್ಕೆ ಮರಳಿದ್ದಾರೆ ಮತ್ತು ಜಾಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಖೋಟ್ಕರ್ ಈ ಹಿಂದೆ ಹೇಳಿದ್ದರು. ಆದರೆ ಈ ನಿರ್ಧಾರವನ್ನು ಬದಲಿಸಿರುವ ಶಿವಸೇನೆ, ಜಾಲ್ನಾ ಜಿಲ್ಲೆಯಲ್ಲಿ ಪಂಗರ್ಕರ್ ಅವರಿಗೆ ಪಕ್ಷದ ಯಾವುದೇ ಹುದ್ದೆ ನೀಡಿದ್ದರೆ ಆ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯಿಂದ ಜಾಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು. ಈ ವರ್ಷದ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿದೆ. 2011 ರಲ್ಲಿ ಪಂಗರ್ಕರ್ ಅವರಿಗೆ ಶಿವಸೇನೆ ಟಿಕೆಟ್ ನಿರಾಕರಿಸಿದ ನಂತರ, ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನವೆಂಬರ್ 20 ರಂದು ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.