ದಿಂಡಿಗಲ್ (ತಮಿಳುನಾಡು): ತಿರುಪತಿ ಲಡ್ಡು ತಯಾರಿಕೆಗೆ ಕಳುಹಿಸಲಾಗಿದ್ದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿರುವುದನ್ನು ಮುಂಬೈ ಸಂಶೋಧನಾ ಸಂಸ್ಥೆ ಬಹಿರಂಗಪಡಿಸಿದೆ. ಈ ವಿಚಾರ ಈಗಾಗಲೇ ದೇಶಾದ್ಯಂತ ಸದ್ದು ಮಾಡುತ್ತಿದೆ. ತಿರುಪತಿ ದೇವಸ್ಥಾನಕ್ಕೆ ತುಪ್ಪ ರವಾನಿಸಿದ ದಿಂಡಿಗಲ್ ಮೂಲದ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ತಿರುಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿರುಪತಿ ಲಡ್ಡು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೂಡಾ ಆದೇಶಿಸಿದೆ. ಇದರ ಬೆನ್ನಲ್ಲೇ ತುಪ್ಪ ಪೂರೈಸಿದ ದಿಂಡಿಗಲ್ ಮೂಲದ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿದೆ.