ನವದೆಹಲಿ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ ಠಾಕ್ರೆ ತಮ್ಮ ಮೂಲ ಸಿದ್ಧಾಂತಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಠಾಕ್ರೆ ಅವರ ಜನ್ಮದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಜನರ ಕಲ್ಯಾಣ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ಅವರ ಬದ್ಧತೆಗಾಗಿ ಅವರನ್ನು ಗೌರವಿಸಲಾಗುತ್ತದೆ ಮತ್ತು ನೆನಪಿಸಿಕೊಳ್ಳಲಾಗುತ್ತದೆ. ಅವರು ತಮ್ಮ ಮೂಲ ನಂಬಿಕೆಗಳ ವಿಷಯಕ್ಕೆ ಬಂದಾಗ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಮತ್ತು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಹೆಚ್ಚಿಸಲು ನಿರಂತರವಾಗಿ ಕೊಡುಗೆ ನೀಡಿದರು." ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯು ಆರಂಭದಲ್ಲಿ ಮರಾಠಿ ಮಾಣೂಸ್ ಅಥವಾ ಮರಾಠಿ ಭಾಷಿಕರ ಶ್ರೇಯೋಭಿವೃದ್ಧಿಗಾಗಿ ಹೋರಾಡುವ ಪಕ್ಷವಾಗಿತ್ತು. ಆದರೆ ನಂತರದ ವರ್ಷಗಳಲ್ಲಿ ಇದು ಉಗ್ರ ಹಿಂದೂ ಪರ ಸಂಘಟನೆಯಾಗಿ ಬೆಳೆಯಿತು. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಅನುಯಾಯಿಗಳನ್ನು ಹೊಂದಿದ್ದ ಬಾಳಾಸಾಹೇಬ್ ಠಾಕ್ರೆ ಅವರ ವರ್ಚಸ್ಸು ನಂತರದ ದಿನಗಳಲ್ಲಿ ದೇಶಾದ್ಯಂತ ಬೆಳೆಯಿತು.