ಜಲಗಾಂವ್ (ಮಹಾರಾಷ್ಟ್ರ):ಉತ್ತರ ಮಹಾರಾಷ್ಟ್ರದ ಜಲ್ಗಾಂವ್ನಲ್ಲಿ ಟ್ರೈನ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ವದಂತಿ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಹಳಿಗಳ ಮೇಲೆ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ 12 ಜನ ಪ್ರಯಾಣಿಕರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪಚೋರಾ ನಿಲ್ದಾಣದ ಬಳಿಯ ಮಹೇಜಿ ಮತ್ತು ಪರ್ಧಾಡೆ ನಡುವಣ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಸಂಜೆ 5 ಗಂಟೆ ಸುಮಾರಿಗೆ ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು. ಇದರಿಂದಾಗಿ ಟ್ರೈನ್ ನಿಂತಿದ್ದರಿಂದ ಪುಷ್ಪಕ್ ಎಕ್ಸ್ಪ್ರೆಸ್ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಟ್ರ್ಯಾಕ್ ಮೇಲೆ ತೆರಳುತ್ತಿದ್ದ ವೇಳೆ, ಆ ಹಳಿ ಮೇಲೆ ಎದುರಿನಿಂದ ಬರುತ್ತಿದ್ದ ಬೆಂಗಳೂರು-ದೆಹಲಿ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿದ್ದಾರೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ. ಅಪಘಾತದ ಸ್ಥಳವು ಮುಂಬೈನಿಂದ 400 ಕಿ.ಮೀ ದೂರದಲ್ಲಿದೆ.
ಘಟನೆ ನಡೆದಿದ್ದು ಹೇಗೆ? ಪ್ರಾಥಮಿಕ ಮಾಹಿತಿ ಪ್ರಕಾರ, ಪುಷ್ಪಕ್ ಎಕ್ಸ್ಪ್ರೆಸ್ನ ಬೋಗಿಯೊಂದರಲ್ಲಿ ಹಾಟ್ ಆಕ್ಸಲ್ ಅಥವಾ ಬ್ರೇಕ್-ಬೈಂಡಿಂಗ್ (ಜಾಮಿಂಗ್) ನಿಂದಾಗಿ ಬೆಂಕಿ ಕಿಡಿಗಳು ಕಾಣಿಸಿಕೊಂಡಿದ್ದವು. ಇದರಿಂದ ಕೆಲವು ಪ್ರಯಾಣಿಕರು ಗಾಬರಿಗೊಂಡು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ಇನ್ನೂ ಕೆಲವರು ರೈಲಿನಿಂದ ಕೆಳಕ್ಕೆ ಜಿಗಿದಿದ್ದಾರೆ. ಅದೇ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್ಪ್ರೆಸ್ ಹಾದುಹೋಗುತ್ತಿತ್ತು ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.