ಕರ್ನಾಟಕ

karnataka

ETV Bharat / bharat

ಬಿಜೆಪಿಯೊಂದಿಗೆ ಮೈತ್ರಿ ಸುಳಿವು ನೀಡಿದ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ - ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಬೆನ್ನಲ್ಲೇ ಅವರ ಮೊಮ್ಮಗ ಹಾಗು ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ.

rld-chief-jayant-choudhary-hints-at-alliance-with-bjp-in-lok-sabha-polls
ಬಿಜೆಪಿಯೊಂದಿಗೆ ಮೈತ್ರಿ ಸುಳಿವು ನೀಡಿದ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ

By ETV Bharat Karnataka Team

Published : Feb 9, 2024, 10:42 PM IST

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವನ್ನು ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ನೀಡಿದ್ದಾರೆ. ಜಯಂತ್ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಮೊಮ್ಮಗ. ಇಂದು ಕೇಂದ್ರ ಸರ್ಕಾರವು ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

2024ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್​ ಜೊತೆಗೆ ಆರ್‌ಎಲ್‌ಡಿ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಮಾಡಿತ್ತು. ಕೆಲವು ದಿನಗಳಿಂದ ಬಿಜೆಪಿ ಜೊತೆಗೆ ಹೋಗುವ ವರದಿಗಳು ಬಂದಿದ್ದವು. ಇದರ ನಡುವೆ ಪ್ರಧಾನಿ ಮೋದಿ, ಜಯಂತ್ ಚೌಧರಿ ಅವರ ಅಜ್ಜ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದಾರೆ.

ಈ ಬಗ್ಗೆ ಜಯಂತ್ ಚೌಧರಿ ಸಂತಸ ವ್ಯಕ್ತಪಡಿಸಿದರು. ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ಖುಷಿ ಹಂಚಿಕೊಂಡಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಚೌಧರಿ, ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯ ಸುಳಿವು ನೀಡಿದ್ದಾರೆ. ''ಹಿಂದಿನ ಸರ್ಕಾರಗಳು ಇಂದಿನವರೆಗೂ ಮಾಡಲಾಗದ್ದನ್ನು ಪ್ರಧಾನಿ ಮೋದಿ ತಮ್ಮ ದೂರದೃಷ್ಟಿಯಿಂದ ಪೂರ್ಣಗೊಳಿಸಿದ್ದಾರೆ. ಮುಖ್ಯವಾಹಿನಿಯಿಂದ ದೂರ ಉಳಿದ ಜನರನ್ನು ಪ್ರೋತ್ಸಾಹಿಸುತ್ತಿರುವ ಮೋದಿ ಸರ್ಕಾರಕ್ಕೆ ಮತ್ತೊಮ್ಮೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ'' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಸ್ವಾಮಿನಾಥನ್​, ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚರಣ್​​​​ ಸಿಂಗ್​ಗೆ ಭಾರತ ರತ್ನದ ಗರಿ

ಮುಂದುವರೆದು, ''ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದು ನನಗೆ ಒಂದು ದೊಡ್ಡ ದಿನ ಮತ್ತು ಭಾವನಾತ್ಮಕ ಕ್ಷಣವಾಗಿದೆ. ನಾನು ರಾಷ್ಟ್ರಪತಿ, ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಮತ್ತೊಮ್ಮೆ ಧನ್ಯವಾದ ಹೇಳಲು ಬಯಸುತ್ತೇನೆ. ಅಲ್ಲದೇ, ಇಂದು ಮೂವರಿಗೆ ಘೋಷಿಸಿರುವ ಪ್ರಶಸ್ತಿಗಳು ಜನರ ಭಾವನೆಗಳೊಂದಿಗೆ ಸಂಬಂಧ ಹೊಂದಿವೆ'' ಎಂದು ಜಯಂತ್ ತಿಳಿಸಿದ್ದಾರೆ.

ಇದೇ ವೇಳೆ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಕೈ ಜೋಡಿಸುತ್ತೀರಾ ಎಂಬ ಪ್ರಶ್ನೆಗೆ, ''ಇದರಲ್ಲಿ ಏನಾದರೂ ಉಳಿದಿದೆಯೇ?, ನಾನು ಇದನ್ನು ಹೇಗೆ ನಿರಾಕರಿಸಬಲ್ಲೆ'' ಎಂದು ಮರುಪ್ರಶ್ನಿಸಿದ್ದಾರೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ಕೊಟ್ಟಿದ್ದಾರೆ.

ಸೀಟು ಹಂಚಿಕೆ ಕುರಿತ ಪ್ರಶ್ನೆಗೆ ಅವರು, ''ಸೀಟು ಅಥವಾ ಮತಗಳ ಬಗ್ಗೆ ಮಾತನಾಡುವುದು ಇಂದಿನ ದಿನ ಮಹತ್ವವನ್ನು ಕಡಿಮೆ ಮಾಡುತ್ತದೆ. ಪ್ರಧಾನಿ ಮೋದಿ ದೇಶದ ಭಾವನೆಗಳು ಮತ್ತು ಸ್ವಭಾವವನ್ನು ಅರ್ಥಮಾಡಿಕೊಳ್ಳುವ ನಿರ್ಧಾರ ನೀಡಿದ್ದಾರೆ'' ಎಂದು ಮತ್ತಷ್ಟು ಬಿಜೆಪಿಗೆ ಹತ್ತಿರವಾಗುವ ಸಂದೇಶ ನೀಡಿದ್ದಾರೆ. ಮತ್ತೊಂದೆಡೆ, ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದನ್ನು ಕಾಂಗ್ರೆಸ್​, ಸಮಾಜವಾದಿ ಪಕ್ಷ ಸಹ ಸ್ವಾಗತಿಸಿದೆ.

ಇದನ್ನೂ ಓದಿ:ನರಸಿಂಹ ರಾವ್, ಚರಣ್ ಸಿಂಗ್, ಸ್ವಾಮಿನಾಥನ್​ಗೆ ಭಾರತ ರತ್ನ: ಸ್ವಾಗತಿಸಿದ ಖರ್ಗೆ, ಸೋನಿಯಾ

ABOUT THE AUTHOR

...view details