ಅಮರಾವತಿ (ಆಂಧ್ರಪ್ರದೇಶ) :ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಅದೇ ರೀತಿ ಮುಂಬರುವ ವಿಧಾನಸಭೆ ಚುನಾವಣೆ 2024ಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ 34 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪೀಠಾಪುರಂ ವಿಧಾನಸಭಾ ಕ್ಷೇತ್ರವು ಕಾಕಿನಾಡ ಜಿಲ್ಲೆಯ ವ್ಯಾಪ್ತಿಗೆ ಸೇರಿದೆ. ಪ್ರಸ್ತುತ ಈ ಕ್ಷೇತ್ರವನ್ನು ವೈಎಸ್ಆರ್ಸಿ ಶಾಸಕ ಪ್ರತಿನಿಧಿಸುತ್ತಿದ್ದಾರೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗಾಜುವಾಕ ಮತ್ತು ಭೀಮಾವರಂ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಿ ಸೋತಿದ್ದರು.
ಪವನ್ ಕಲ್ಯಾಣ್ ಅವರ ಜನಸೇನಾ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷಗಳು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿದ್ದು, ಲೋಕಸಭೆ ಮತ್ತು ವಿಧಾನಸಭೆಗೆ ಇವೆರಡು ಸೀಟು ಹಂಚಿಕೆ ಮಾಡಿಕೊಂಡಿವೆ. ವಿಧಾನಸಭೆಯಲ್ಲಿ ಟಿಡಿಪಿ 144, ಜನಸೇನಾ 21 ಮತ್ತು ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಲೋಕಸಭೆಯಲ್ಲಿ ಟಿಡಿಪಿ 17, ಬಿಜೆಪಿ 6, ಜನಸೇನಾ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿವೆ ಎಂಬುದಾಗಿ ತಿಳಿದು ಬಂದಿದೆ.