ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ 'ತಾಜ್' ಎಂಬ ಚಿತ್ರ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ನೈಜ ಘಟನೆಯ ಕಥೆ ಆಧರಿಸಿರೋ ಈ ಚಿತ್ರದ ಟೀಸರ್ ಮತ್ತು ಹಾಡೊಂದನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ಮಾಪಕ ಮತ್ತು ಛಾಯಾಗ್ರಹಕರಾದ ಅಣಜಿ ನಾಗರಾಜ್, ನಿರ್ಮಾಪಕ ಸತೀಶ್, ಹತಾರ ಚಿತ್ರದ ನಿರ್ಮಾಪಕ ಸೌಗತ್, ನಟರಾದ ಚಂದು ಶಿವಾನಂದ್ ಸೇರಿದಂತೆ ಚಿತ್ರತಂಡದ ಸಮ್ಮುಖದಲ್ಲಿ ಟೀಸರ್ ಮತ್ತು ಹಾಡನ್ನು ಬಿಡುಗಡೆಗೊಳಿಸಿದರು.
ರಾಜರತ್ನ ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ಯುವ ಪ್ರತಿಭೆ ಷಣ್ಮುಖ 'ತಾಜ್' ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಲರಾಜವಾಡಿ, ಶೋಭರಾಜ್, ವರ್ಧನ್, ಪದ್ಮಾವಾಸಂತಿ, ಪಟ್ರೆ ನಾಗರಾಜ್, ಕಡ್ಡಿ ವಿಶ್ವ, ಸೂರಜ್ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸುಮಾರು 12 ವರ್ಷಗಳಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ, ಬರಹಗಾರನಾಗಿ, ಸಾಹಿತಿಯಾಗಿ ಗುರುತಿಸಿಕೊಂಡಿರುವ ಬಿ. ರಾಜರತ್ನ ಮೊದಲ ಬಾರಿಗೆ ಈ ಸಿನಿಮಾದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.
ಮೊದಲಿಗೆ ತಾಜ್ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಬಿ. ರಾಜರತ್ನ, ಸುಮಾರು 10ಕ್ಕೂ ಹೆಚ್ಚು ಕಥೆಗಳನ್ನು ಕೇಳಿದ ನಂತರ ನಿರ್ಮಾಪಕರು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಇದೊಂದು ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ. ನಮ್ಮ ಸುತ್ತಮುತ್ತ ನಡೆದ ಶೇಕಡಾ 80 ರಷ್ಟು ನೈಜ ಘಟನೆಗಳು ಮತ್ತು ಶೇಕಡಾ 20 ರಷ್ಟು ಸಿನಿಮೀಯ ಅಂಶಗಳನ್ನು ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ. ಹಿಂದೂ-ಮುಸ್ಲಿಂ ಜೋಡಿಯ ಪ್ರೇಮಕಥೆ ಸಿನಿಮಾದಲ್ಲಿದ್ದು, ಜೊತೆಗೆ ಮಾನವೀಯ ನೆಲೆಗಟ್ಟು, ಸಾಮಾಜಿಕ ಸಂದೇಶ ಎಲ್ಲವನ್ನೂ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಯವ ನಟ ಷಣ್ಮುಖ ಈ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ ಎಂದರು.