ಕರ್ನಾಟಕ

karnataka

ETV Bharat / state

ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ; ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ನೀಡಲು ತೀರ್ಮಾನ: ಸಿಎಂ ಘೋಷಣೆ - Rs 15000 Per Month to Student

ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

By ETV Bharat Karnataka Team

Published : Jul 5, 2024, 5:26 PM IST

CM SIDDARAMAIAH ANNOUNCED  COMPETITIVE EXAM PREPARATION  BENGALURU
ಸಿಎಂ ಘೋಷಣೆ (ETV Bharat)

ಬೆಂಗಳೂರು :ಐಎಎಸ್, ಐಆರ್​ಎಸ್ ಸೇರಿದಂತೆ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್​ಸಿ/ಎಸ್​ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ತು ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ 10 ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಇದನ್ನು 5 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು. ದೆಹಲಿಯಂತೆ ಹಾಸ್ಟೆಲ್​ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಎಸ್​ಸಿಎಸ್​ಪಿ/ಟಿಎಸ್​ಪಿ ಪರಿಷತ್ ಸಭೆಯ ಕೊನೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ.

2024-25 ನೇ ಸಾಲಿಗೆ ಎಸ್ ಸಿಎಸ್ ಪಿ/ಟಿಎಸ್ ಪಿ ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action planಗೆ ಅನುಮೋದನೆ ನೀಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 1,60,000 ಕೋಟಿ ರೂಪಾಯಿಯಲ್ಲಿ ಎಸ್​ಸಿಎಸ್​ಪಿ/ಟಿಎಸ್​ಪಿಗೆ ಸುಮಾರು 39,121.46 ಕೋಟಿ ರೂ., ಎಸ್​ಸಿಎಸ್​ಪಿ/ಟಿಎಸ್​ಪಿ ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ ಎಂದು ಅವರು ಹೇಳಿದರು.

ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ರೂ. ಹೆಚ್ಚಾಗಿದೆ. 3,900 ಕೋಟಿ ರೂ. ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು, ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಶೇ. 100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.

ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸೀಟು, ಉಳಿದ ಶೇ. 25 ರಷ್ಟು ಸೀಟುಗಳನ್ನು ಇತರ ಪ್ರದೇಶದ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಸರ್ಕಾರಿ ಶಾಲೆಗಿಂತ ಕ್ರೈಸ್​​ನಲ್ಲಿ ಓದಿರುವ ಬಡ ವಿದ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರ ನ್ಯೂನತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು. ಬಜೆಟ್​ನಲ್ಲಿ ನಾವು ಘೋಷಿಸಿರುವ ಎಲ್ಲ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು ಎಂದು ನಿರ್ದೇಶನ ನೀಡಿದರು.

ಬಿಜೆಪಿಯವರು ಬಾತ್​​​ ರೂಮ್​ ಕಿಟ್​​ ಕೊಡಲೇ ಇಲ್ಲ:ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ. ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡು ಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು. ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು. ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹತ್ತು ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

ಗ್ಯಾರಂಟಿ ಯೋಜನೆಗಳ ಮೂಲಕವೂ ಕೂಡ ಈ ವರ್ಗದ ಜನರಿಗೆ ಅನುದಾನ ಸಿಗಲಿದೆ. ಪ್ರತಿ ಇಲಾಖೆಗೆ ಎಷ್ಟೆಷ್ಟು ಹಣ ಎಂಬುದನ್ನೂ ನಿಗದಿ ಮಾಡಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲ ಇಲಾಖೆಗೂ ನೀಡಿದ್ದೇವೆ. ಕೆಲವು ಅಭಿಪ್ರಾಯಗಳನ್ನು ಶಾಸಕರಾದ ನರೇಂದ್ರ ಸ್ವಾಮಿ ಹಾಗೂ ಅಬ್ಬಯ್ಯ, ಪ್ರಕಾಶ್ ರಾಥೋಡ್, ಶ್ರೀನಿವಾಸ್ , ಬಸವಂತಪ್ಪ ನೀಡಿದ್ದಾರೆ.

ಅಂತಿಮವಾಗಿ 1,327 ಕೋಟಿ ಅನುದಾನ ಉಳಿತಾಯ ಆಗಬಹುದು ಎಂಬುದು ಅಂದಾಜು ಮಾಡಲಾಗಿದೆ. ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಬಂದಿದೆ. ಮೌಲ್ಯಮಾಪನ ಮಾಡಿದ ಪ್ರಕಾರ ಶೇ. 65ರಷ್ಟು ಈ ಹಣದ ಉಪಯೋಗ ಆಗುತ್ತಿದೆ ಎಂಬುದು ಕಂಡು ಬಂದಿದೆ. ರ‍್ಯಾಂಡಮ್ ಆಗಿ ಮೌಲ್ಯಮಾಪನ ಮಾಡಿದಾಗ ಇದರ ಸದುಪಯೋಗ ಆಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ಹೈಯರ್ ಎಜುಕೇಶನ್ ಕ್ಷೇತ್ರಕ್ಕೆ ಲ್ಯಾಪ್​ಟ್ಯಾಪ್ ನೀಡಬೇಕು ಎಂದು ಸಲಹೆ ಬಂದಿದೆ. ಇದರ ಬಗ್ಗೆಯೂ ಕೂಡ ನಿರ್ಧಾರ ಮಾಡುತ್ತಿದ್ದೇವೆ ಎಂದು ಸಿಎಂ ಹೇಳಿದರು.

ಬಿಜೆಪಿಯವರಿಗೆ ನೈತಿಕತೆ ಇಲ್ಲ: ಬಿಜೆಪಿಯವರು ಮೊದಲು ಅವರ ಸರ್ಕಾರ ಇರುವ ರಾಜ್ಯಗಳಲ್ಲಿ ಜಾರಿಗೆ ತರಲು ಹೇಳಿ, ಗ್ಯಾರಂಟಿ ಯೋಜನೆ ಹಣ ನಾವು ಅದೇ ಸಮುದಾಯಕ್ಕೆ ಖರ್ಚು ಮಾಡ್ತೇವೆ. ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗಬಾರದು ಎಂಬ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪ್ರತಿಪಕ್ಷದ ನಾಯಕರಿಗೆ ಅಧಿಕಾರಿಗಳು ಹೋಗಬಾರದೆಂದು ಈ ಹಿಂದೆ ಆದೇಶ ಮಾಡಿದ್ದರಲ್ಲಾ ಅವರು. ಕುಮಾರಸ್ವಾಮಿಗಾಗಿ ಮಾಡಿದ್ದಲ್ಲ ಅದು. ಹಿಂದಿನಿಂದಲೂ ಇದೆ. ಅದು ಮುಂದುವರಿಸಿದ್ದೇವೆ. ಜನತಾ ದರ್ಶನ ಮಾಡುವುದು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಎಂದು ಹೇಳಿದರು.

ಓದಿ:ಶೇ 100ರಷ್ಟು ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ಮೇಲೆ ಕ್ರಮ, ನಿರ್ಲಕ್ಷ್ಯಕ್ಕಿಲ್ಲ ಕ್ಷಮೆ: ಸಿಎಂ - CM Siddaramaiah

ABOUT THE AUTHOR

...view details