ಕರ್ನಾಟಕ

karnataka

ETV Bharat / state

ಸರ್ಕಾರಿ ಕೆಲಸ, ಮನಿ ಡಬ್ಲಿಂಗ್ ಹೆಸರಲ್ಲಿ ವಂಚಿಸಿ ಪರಾರಿ: ವಿದೇಶದಿಂದ ಬಂದಿಳಿಯುತ್ತಿದ್ದಂತೆ ಮಾಜಿ ಪಿಡಿಒ ಬಂಧನ - CHEATING ACCUSED ARREST

ಸರ್ಕಾರಿ ಕೆಲಸ, ಮನಿ ಡಬ್ಲಿಂಗ್ ಹೆಸರಿನಲ್ಲಿ ವಂಚಿಸಿ ಪರಾರಿಯಾಗಿದ್ದ ಆರೋಪಿ ವಿದೇಶದಿಂದ ಬರುತ್ತಿದ್ದಂತೆಯೇ ಪೊಲೀಸರು ಬಂಧನ ಮಾಡಿದ್ದಾರೆ.

accused-arrested-for-cheating-in-the-name-of-government-job-and-money-doubling
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Feb 19, 2025, 11:27 AM IST

ಬೆಂಗಳೂರು:ಸರ್ಕಾರಿ ಕೆಲಸ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿದ್ದ ಪ್ರಕರಣದ ಆರೋಪಿಯನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಪಿಡಿಒ ಯೋಗೇಂದ್ರ ಎಂಬಾತ ಬೆಂಗಳೂರಿನ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಯೋಗೇಂದ್ರ, 2020ರಲ್ಲಿ ಕರ್ತವ್ಯದಿಂದ ವಜಾಗೊಂಡಿದ್ದ. 2023ರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಂದ 17 ಲಕ್ಷ ರೂ. ಪಡೆದು ಪರಾರಿಯಾಗಿದ್ದ ಆರೋಪದ ಮೇಲೆ ಯೋಗೇಂದ್ರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ (ETV Bharat)

ಅಲ್ಲದೇ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಮಾಡಿಕೊಡುವುದಾಗಿ ವ್ಯಕ್ತಿಯೊಬ್ಬರಿಂದ 1.35 ಕೋಟಿ ರೂ ಪಡೆದು ವಂಚಿಸಿದ್ದ ಆರೋಪದ ಮೇಲೆ ಯೋಗೇಂದ್ರ ವಿರುದ್ಧ 2024ರಲ್ಲಿ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಶ್ರೀಲಂಕಾ, ನಂತರ ಅಲ್ಲಿಂದ ದುಬೈಗೆ ತೆರಳಿ ತಲೆಮರೆಸಿಕೊಂಡಿದ್ದ. ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರು ಆತ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ.

ಸುಲಭವಾಗಿ ವಂಚಿಸಬಹುದಾದ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು, ಅವರ ಬಳಿ ತನಗೆ ರಾಜಕಾರಣಿಗಳ ಪರಿಚಯವಿದೆ, ಪ್ರಭಾವಿ ವ್ಯಕ್ತಿಗಳು ನನಗೆ ಗೊತ್ತು ಎಂದು ವಿವಿಧ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲಸ ಕೊಡಿಸುವುದಾಗಿ, ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಬರುವ ಆಮಿಷಗಳಲ್ಲಿ ವಂಚನೆಯ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಅಂತಹ ಆಮಿಷಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಸಿಎಂ, ಗೃಹ ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಬಂಧನ

ABOUT THE AUTHOR

...view details