ಕರ್ನಾಟಕ

karnataka

ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕ ಆರೋಪಿಗಳನ್ನು ಜೈಲಿನಲ್ಲಿರಿಸಲಾಗುವುದಿಲ್ಲ: ಹೈಕೋರ್ಟ್ - High Court

By ETV Bharat Karnataka Team

Published : Jul 11, 2024, 7:37 PM IST

ಜೋಡಿ ಕೊಲೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕ ಆರೋಪಿಗಳನ್ನು ಜೈಲಿನಲ್ಲಿರಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ ಬಳಿಕವೂ ಆರೋಪಿಯನ್ನು ಬಂಧನದಲ್ಲಿ ಇರಿಸಿ ವಿಚಾರಣೆ ಮುಂದುವರಿಸಿದರೆ ಅದು ವಿಚಾರಣಾ ಪೂರ್ವ ಶಿಕ್ಷೆಯಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೋಡಿ ಕೊಲೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಎಂ.ಬಿ.ಸಂತೋಷ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದ ಸಂಬಂಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆದರೂ, ಅರ್ಜಿದಾರರನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:ಸಂತೋಷ್ ಅವರಿಗೆ ಸಂಬಂಧಿಸಿದ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿದ್ದ ಕೃಷಿ ಜಮೀನನ್ನು ಕಾರ್ತಿಕ್ ಮಧ್ಯವರ್ತಿಯಾಗಿ ಮಾರಾಟ ಮಾಡಿಸಿದ್ದರು. ಮಾರಾಟದ ನಂತರ ತನಗೆ ಬರಬೇಕಾದ ಲಾಭದ ಹಣಕ್ಕೆ ಕಾರ್ತಿಕ್ ಮೋಸ ಮಾಡಿದ್ದಾರೆ ಎಂದು ಸಂತೋಷ್ ತಗಾದೆ ತೆಗೆದಿದ್ದರು‌‌.

ಈ ಸಂಬಂಧ 2023ರ ಆಗಸ್ಟ್ 13ರಂದು ತಮ್ಮ ಮನೆಯಲ್ಲಿ ಕಾರ್ತಿಕ್ ಜೊತೆ ಮಾತುಕತೆ ನಡೆಸುತ್ತಿದ್ದ ಸಮಯದಲ್ಲಿ ಆತನ ಮೇಲೆ ಹಲ್ಲೆ ಸಹ ಮಾಡಿದ್ದ. ಸ್ಥಳದಲ್ಲಿಯೇ ಇದ್ದ ಸಂತೋಷ್ ಅವರ ತಂದೆ ಭಾಸ್ಕರಗೌಡ ಇದನ್ನು ತಡೆಯಲು ಮುಂದಾದಾಗ ಅವರ ಮೇಲೂ ಹಾಗೂ ಅವರ ತಾಯಿ ಪ್ರೇಮಾ ಅವರ ಮೇಲೂ ಹಲ್ಲೆ ನಡೆಸಿದ್ದನು. ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟರೆ ಭಾಸ್ಕರಗೌಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಅವರೂ ಮೃತಪಟ್ಟಿದ್ದರು. ಈ ಸಂಬಂಧ ಕಾರ್ತಿಕ್ ಪತ್ನಿ ಶಾಂಭವಿ ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ದೋಷಾರೋಪಣ ಪಟ್ಟಿಯಲ್ಲಿ ವಿವರಿಸಲಾಗಿತ್ತು.

ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಂತೋಷ್ ಅವರನ್ನು ಬಂಧಿಸಿದ್ದರು. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ ಕಲಂ 302 ಮತ್ತು 307ರ ಅಡಿ ಎಫ್ಐಆರ್ ದಾಖಲಿಸಿ ಚಿಕ್ಕಮಗಳೂರು ಎರಡನೇ ಹೆಚ್ಚುವರಿ ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯ ಸಂತೋಷ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು ಇದನ್ನು ಪ್ರಶ್ನಿಸಿ ಸಂತೋಷ್​ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ:ಶೇ.5ರಷ್ಟು ಮಾತ್ರ ಸೇವಾ ಶುಲ್ಕ: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಉಬರ್ ಮೇಲ್ಮನವಿ - Uber Appeal On Service Charge

ABOUT THE AUTHOR

...view details