ಕರ್ನಾಟಕ

karnataka

ಅಸಹಜ ಲೈಂಗಿಕ ಕಿರುಕುಳ ಆರೋಪ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸೂರಜ್ ರೇವಣ್ಣ - Abnormal sexual assault case

By ETV Bharat Karnataka Team

Published : Jul 11, 2024, 10:50 PM IST

ಅಸಹಜ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ABNORMAL SEXUAL ASSAULT CASE
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ETV Bharat)

ಬೆಂಗಳೂರು:ಅಸಹಜ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಾಮೀನು ಕೋರಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ(ಸೆಷನ್ಸ್) ಮೆಟ್ಟಿಲೇರಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಈಗಾಗಲೇ ಸೂರಜ್ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ಜೆಡಿಎಸ್ ಪಕ್ಷದ ಕಾರ್ಯಕರ್ತ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಸೂರಜ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ಪೀಠ, ಪ್ರಕರಣದ ಸಂಬಂಧ ಸಿಐಡಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿದೆ. ಮತ್ತೊಂದು ದೂರಿನ ಸಂಬಂಧದ ಪ್ರಕರಣದಲ್ಲಿ ಈಗಾಗಲೇ ಸಿಐಡಿ ಆಕ್ಷೇಪಣೆ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.

ಪ್ರಕರಣದ ಹಿನ್ನೆಲೆ:ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್​ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರೂ ಎಂದು ಸಂತ್ರಸ್ತ ಯುವಕ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂನ್ 22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.

ಮತ್ತೊಂದು ಪ್ರಕರಣದಲ್ಲಿ ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಜೂನ್ 25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಸೂರಜ್ ತನ್ನ ಮೇಲೂ ಕೋವಿಡ್ ಲಾಕ್​ಡೌನ್​ ಸಂದರ್ಭದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಚೇತನ್ ವಿರುದ್ಧ ದೂರು ಕೊಡಿಸಲು ಸಚಿನ್, ರಕ್ಷಿತ್ ಮೂಲಕ ತನ್ನ ಮೇಲೆ ಒತ್ತಡ ಹೇರಿದ್ದಾರೆ. ಸೂರಜ್ ಪ್ರಭಾವಿ ಕುಟುಂಬದವರಾಗಿದ್ದು, ಕೊಲೆ ಮಾಡಿಸುವ ಭಯದಿಂದ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಶಿವಕುಮಾರ್ ದೂರಿನಲ್ಲಿ ವಿವರಿಸಿದ್ದಾರೆ. ಈ ಪ್ರಕರಣದಲ್ಲಿ ಸೂರಜ್ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ಇದನ್ನೂ ಓದಿ:ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕ ಆರೋಪಿಗಳನ್ನು ಜೈಲಿನಲ್ಲಿರಿಸಲಾಗುವುದಿಲ್ಲ: ಹೈಕೋರ್ಟ್ - High Court

ABOUT THE AUTHOR

...view details