ಬೆಂಗಳೂರು:ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಕಾನ್ಸ್ಟೇಬಲ್ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಾಗರಭಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ ಮನು ಸಿ.ಬಿ (27) ಮೃತರು.
ತಡರಾತ್ರಿ 8.20ರ ಸುಮಾರಿಗೆ ನಾಗರಭಾವಿಯಿಂದ ನಾಯಂಡಹಳ್ಳಿ ಮಾರ್ಗದಲ್ಲಿ ಬರುತ್ತಿದ್ದ ಮನು ಅವರ ಬೈಕ್ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮರಳಿನಿಂದ ನಿಯಂತ್ರಣ ತಪ್ಪಿ ಮುಂದಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಇತರೆ ವಾಹನ ಸವಾರರ ಸಹಾಯದಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.