ಕರ್ನಾಟಕ

karnataka

'ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ-ಜೆಡಿಎಸ್ ನಾಯಕರ ಉದ್ದೇಶ ಈಡೇರಲ್ಲ' - Sharan Prakash Patil

By ETV Bharat Karnataka Team

Published : Aug 5, 2024, 10:00 PM IST

ರಾಜ್ಯ ಸರ್ಕಾರವನ್ನು ಬಿಜೆಪಿ, ಜೆಡಿಎಸ್ ನಾಯಕರು ಅಸ್ಥಿರಗೊಳಿಸಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಅವರ ಉದ್ದೇಶ ಈಡೇರುವುದಿಲ್ಲ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

minister-sharan-prakash-patil
ಸಚಿವ ಶರಣ್ ಪ್ರಕಾಶ್ ಪಾಟೀಲ್ (ETV Bharat)

ಸಚಿವ ಶರಣ್ ಪ್ರಕಾಶ್ ಪಾಟೀಲ್ ಮಾತನಾಡಿದರು. (ETV Bharat)

ಬೆಂಗಳೂರು: ಬಹುಮತ ಹೊಂದಿರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ-ಜೆಡಿಎಸ್ ನಾಯಕರ ಉದ್ದೇಶ ಯಾವುದೇ ಕಾರಣಕ್ಕೂ ಈಡೇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ದೋಸ್ತಿ ಪಕ್ಷಗಳ ನಾಯಕರಿಗೆ ಎಚ್ಚರಿಕೆ ಕೊಟ್ಟರು.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಬೌರಿಂಗ್ ಹಾಗೂ ಚರಕ ಆಸ್ಪತ್ರೆಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿರುವ ವಿಚಾರವಾಗಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯದ ಜನತೆ ನಮಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ನೀಡಿದ್ದರು. ಈಗ ನಮ್ಮ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನವನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜನತೆಯ ಮುಂದೆ ಮಾಡುವ ಯತ್ನ ಮಾಡುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದಲ್ಲಿ ಹಗರಣ ನಡೆದಿದೆ ಎಂದು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಅಷ್ಟಕ್ಕೂ ಮುಡಾದಲ್ಲಿ ಹಗರಣ ಏನಾಗಿದೆ?. ಈ ಹಗರಣ ಮಾಡಿದವರು ಯಾರು? ಇದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಹಗರಣವಲ್ಲವೇ? ಎಂದು ತಿರುಗೇಟು ನೀಡಿದರು.

ಮುಡಾದಲ್ಲಿ ನಡೆದಿರುವ ಹಗರಣ ಏನೆಂಬುದನ್ನು ಪಾದಯಾತ್ರೆ ನಡೆಸುತ್ತಿರುವ ಎರಡು ಪಕ್ಷಗಳ ನಾಯಕರು ಹೇಳಬೇಕು. ಹಿಂದೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿ ಲೂಟಿ ಹೊಡೆದಿದೆ. ಪ್ರತಿಯೊಂದು ಇಲಾಖೆಯಲ್ಲೂ ನೂರಾರು ಕೋಟಿ ಹಗರಣ ನಡೆಸಿರುವ ಇವರು, ಈಗ ಯಾವ ಮುಖ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯದ ಜನತೆ ಬಿಜೆಪಿ ಬಗ್ಗೆ ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ. ಸದ್ಯಕ್ಕೆ ಬಿಜೆಪಿ ಸ್ಥಿತಿ ನೀರಿನಿಂದ ತೆಗೆದ ಮೀನಿನ ಹಾಗಾಗಿದೆ. ಅಸ್ಥಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ. ಕನ್ನಡಿಗರು ಮೂರ್ಖರಲ್ಲ. ನೀವು ಎಷ್ಟೇ ಪಾದಯಾತ್ರೆ ಮಾಡಿದರೂ ಜನತೆ ನಂಬುವ ಸ್ಥಿತಿಯಲ್ಲಿ ಇಲ್ಲ. ಮುಂಬರುವ ಯಾವುದೇ ಚುನಾವಣೆಗಳಲ್ಲಿ ಈ ಎರಡೂ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

ಜೆಡಿಎಸ್ ವಿರುದ್ದವೂ ಕಿಡಿಕಾರಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಸರ್ಕಾರ ಕೆಡವಿದವರ ಜೊತೆ ಜೆಡಿಎಸ್ ಹೋಗಿರುವುದು ಅತ್ಯಂತ ನಾಚಿಕೇಡಿನ ಸಂಗತಿ. ನಾವು ಹಿಂದೆ ಆ ಪಕ್ಷಕ್ಕೆ ಆಶ್ರಯ ಕೊಟ್ಟಿದ್ದೆವು. ವಾಸ್ತವವಾಗಿ ಜೆಡಿಎಸ್ ನಮಗೆ ಬೆಂಬಲ ನೀಡಬೇಕಿತ್ತು ಎಂದು ಹೇಳಿದರು.

ಜೆಡಿಎಸ್ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಎಂದು ಪ್ರಶ್ನಿಸಿದ ಅವರು, ಸರ್ಕಾರ ಕೆಡವಿದವರ ಜೊತೆ ಸರ್ಕಾರ ಮಾಡಲು ಜೆಡಿಎಸ್ ಹೋಗಿದೆ. ಬರುವ ದಿನಗಳಲ್ಲಿ ಜೆಡಿಎಸ್ ರಾಜ್ಯದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ:ಮುಡಾ: ಕಾನೂನಾತ್ಮಕ, ರಾಜಕೀಯ ಹೋರಾಟಕ್ಕೆ ಸಿದ್ಧ- ಸಿಎಂ ಸಿದ್ದರಾಮಯ್ಯ - CM Siddaramaiah

ABOUT THE AUTHOR

...view details